ADVERTISEMENT

ಪ. ಬಂಗಾಳ ಹಿಂಸಾಚಾರ: ಬಿಜೆಪಿ ಕಾರ್ಯಕರ್ತರ ಹತ್ಯೆ ಕೇಸಲ್ಲಿ ಸಿಬಿಐ ಚಾರ್ಜ್‌ಶೀಟ್

ಪಿಟಿಐ
Published 2 ಸೆಪ್ಟೆಂಬರ್ 2021, 13:59 IST
Last Updated 2 ಸೆಪ್ಟೆಂಬರ್ 2021, 13:59 IST
ಸಿಬಿಐ: ಸಂಗ್ರಹ ಚಿತ್ರ
ಸಿಬಿಐ: ಸಂಗ್ರಹ ಚಿತ್ರ   

ಕೋಲ್ಕತ್ತ: ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಮೊದಲ ದೋಷಾರೋಪಪಟ್ಟಿ ಸಲ್ಲಿಸಿದೆ.

ಪ್ರಕರಣವನ್ನು ಕಲ್ಕತ್ತ ಹೈಕೋರ್ಟ್, ಸಿಬಿಐಗೆ ಒಪ್ಪಿಸಿದ ಬಳಿಕ ಸಲ್ಲಿಸಲಾದ ಮೊದಲ ಚಾರ್ಜ್‌ಶೀಟ್ ಇದಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ರಾಂಪುರಹಟ್ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯಲ್ಲಿ, ಮೇ 2 ರಂದು ನಡೆದ ಗಲಭೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆಯಲ್ಲಿ ಭಾಗಿಯಾದ ಇಬ್ಬರು ಆರೋಪಿಗಳ ಹೆಸರುಗಳಿವೆ ಎಂದು ತಿಳಿದುಬಂದಿದೆ.

ADVERTISEMENT

ಕೊಲೆ ಮತ್ತು ಅತ್ಯಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಆಗಸ್ಟ್ 19 ರಂದು, ಸಿಬಿಐಗೆ ಆದೇಶಿಸಿತ್ತು.

ಇಲ್ಲಿಯವರೆಗೆ, ಕೇಂದ್ರೀಯ ತನಿಖಾ ದಳ (ಸಿಬಿಐ)ವು ಬಿಜೆಪಿ ಕಾರ್ಯಕರ್ತರ ಕೊಲೆ ಅಥವಾ ಇತರ ಘೋರ ದೌರ್ಜನ್ಯಗಳಲ್ಲಿ ಭಾಗಿಯಾದವರ ವಿರುದ್ಧ ಒಟ್ಟು 34 ಎಫ್‌ಐಆರ್‌ಗಳನ್ನು ದಾಖಲಿಸಿದೆ.

ಈ ಮಧ್ಯೆ, ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ, ನಗರದ ಕಂಕುರ್‌ಗಚಿ ಪ್ರದೇಶದಲ್ಲಿ ನಡೆದ ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತನ ಹತ್ಯೆ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಅಧಿಕಾರಿಗಳ ತಂಡವು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ಸಿಬಿಐ ತನಿಖೆಗೆ ನಿರ್ದೇಶಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.