ಸಿಬಿಐ
ನವದೆಹಲಿ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ದೇವಾಲಯದ ಕಾವಲುಗಾರ ಅಜಿತ್ ಕುಮಾರ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಆರು ಮಂದಿ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ಚುರುಕುಗೊಳಿಸಿದೆ.
ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೇ ಡಿಎಂಕೆ ನೇತೃತ್ವದ ಸರ್ಕಾರವು ಅಜಿತ್ ಕುಮಾರ್ ಲಾಕಪ್ ಡೆತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಇದೀಗ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಸಿಬಿಐ ಪೊಲೀಸರು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿ ಮೃತಪಟ್ಟ ಅಜಿತ್ ಕುಮಾರ್ ಅವರು ಶಿವಗಂಗಾ ಜಿಲ್ಲೆಯ ತಿರುಪುವಣಂನಲ್ಲಿರುವ ಮಾದಾಪುರಂ ಭದ್ರಕಾಳಿಯಮ್ಮನ್ ದೇವಸ್ಥಾನದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ತಮ್ಮ ಕಾರಿನಿಂದ 10 ಪೌಂಡ್ ಚಿನ್ನ ಕಾಣೆಯಾಗಿದೆ ಎಂದು ತಾಯಿ-ಮಗಳು ನೀಡಿದ ದೂರಿನ ಮೇರೆಗೆ, ಕಳವಿನಲ್ಲಿ ಅಜಿತ್ ಕುಮಾರ್ ಪಾತ್ರವಿದೆಯೇ ಎಂದು ತನಿಖೆ ಮಾಡಲು ರಚಿಸಲಾದ ‘ವಿಶೇಷ ತಂಡ’ದ ಆರು ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿ ಅವರು ಸಾವನ್ನಪ್ಪಿದ್ದರು ಎಂಬ ಆರೋಪವಿದೆ.
ಘಟನೆ ಬಹಿರಂಗವಾದ ಎರಡು ದಿನಗಳ ಬಳಿಕ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ‘27 ವರ್ಷದ ಅಜಿತ್ ಕುಮಾರ್ ಮೇಲೆ ನಡೆಸಲಾದ ‘ಕ್ರೂರ ಕೃತ್ಯ’ವನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ. ತಪ್ಪು ಮಾಡಿದ ಪೊಲೀಸರಿಗೆ ಶಿಕ್ಷೆಯಾಗುವಂತೆ ನನ್ನ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸಂತ್ರಸ್ತನ ಕುಟುಂಬದ ಜೊತೆ ನಿಲ್ಲುತ್ತೇವೆ’ ಎಂದು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದು ಸಂತ್ರಸ್ತನ ಕುಟುಂಬದೊಂದಿಗೆ ಅವರು ನಡೆಸಿದ ದೂರವಾಣಿ ಸಂಭಾಷಣೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.