ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಿಜವಾದ ಬಣ್ಣ ಬಯಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಶುಕ್ರವಾರ ತಿರುಗೇಟು ನೀಡಿದ್ದಾರೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರದಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆಗೆ ಸಿಬಿಐ ದಾಳಿ ನಡೆಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅನುರಾಗ್ ಠಾಕೂರ್, ಜನ ಸಾಮಾನ್ಯರನ್ನು ಮೂರ್ಖರೆಂದು ಭಾವಿಸಬೇಡಿ. ಭಷ್ಟಾಚಾರಿಗಳು ಪ್ರಮಾಣಿಕರಾಗಿ ಇರಲು ಎಷ್ಟೇ ಪ್ರಯತ್ನಿಸಿದರೂ ಅವರು ಭ್ರಷ್ಟರಾಗಿಯೇ ಉಳಿಯುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಆಮ್ ಆದ್ಮಿ ಪಕ್ಷದ ಭ್ರಷ್ಟಾಚಾರವು ಒಂದಲ್ಲ, ಹಲವು ಬಾರಿ ಬಯಲಿಗೆ ಬಂದಿದೆ. ಶಿಕ್ಷಣ ಅಲ್ಲ ಅಬಕಾರಿ ನೀತಿಯಲ್ಲಿ ಆದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಯುತ್ತಿದೆ. ಹಾಗೊಂದು ವೇಳೆ ಅಬಕಾರಿ ನೀತಿಯಲ್ಲಿ ಸಮಸ್ಯೆ ಇಲ್ಲದಿದ್ದಲ್ಲಿ ಯಾತಕ್ಕಾಗಿ ವಾಪಾಸ್ ಪಡೆದರು ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ; ದೆಹಲಿ ಮಾದರಿ ತಡೆಯಲು ಯತ್ನ: ಕೇಜ್ರಿವಾಲ್
ಕೇಜ್ರಿವಾಲ್ ರಾಷ್ಟ್ರದ ಹೆಸರಲ್ಲಿ ಸಂದೇಶ ನೀಡುವುದನ್ನು ನಿಲ್ಲಿಸಬೇಕು. ಸಚಿವ ಸತ್ಯೇಂದ್ರ ಜೈನ್ ಜೈಲಿಗೆ ಹೋದಾಗಲೂ ಅವರನ್ನು ವಜಾ ಮಾಡಲಿಲ್ಲ. ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.