ನಾಗಪುರ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವು, ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದರ ಬಗ್ಗೆ ಸಿಬಿಐ ಬಹಿರಂಗಪಡಿಸಬೇಕು ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಒತ್ತಾಯಿಸಿದ್ದಾರೆ.
ಈ ಪ್ರಕರಣದ ತನಿಖಾ ವರದಿಯನ್ನು ಆದಷ್ಟು ಬೇಗ ಬಹಿರಂಗಪಡಿಸಬೇಕು ಎಂದು ಅವರು ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದ ಜನರು, ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ತನಿಖಾ ವರದಿಗಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಹಾಗಾಗಿ ಸುಶಾಂತ್ ಅವರ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದನ್ನು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.
‘ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ ಐದರಿಂದ ಆರು ತಿಂಗಳಾಗಿದೆ. ಸಿಬಿಐ ಆದಷ್ಟು ಬೇಗ ತನ್ನ ವರದಿಯನ್ನು ಸಾರ್ವಜನಿಕಗೊಳಿಸಬೇಕು’ ಎಂದು ಅವರು ಹೇಳಿದರು.
ಜೂನ್ 14 ರಂದು ಮುಂಬೈನ ಬಾಂದ್ರಾದಲ್ಲಿ ಇರುವ ತಮ್ಮ ಅಪಾರ್ಟ್ಮೆಂಟ್ ವಸತಿ ಸಮುಚ್ಚಯದಲ್ಲಿ ಸುಶಾಂತ್ ಸಿಂಗ್ ಮೃತದೇಹ ಪತ್ತೆಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.