ನವದೆಹಲಿ: ತರಗತಿಗಳಿಗೆ ಗೈರುಹಾಜರಾಗುವ ವಿದ್ಯಾರ್ಥಿಗಳ ಮಾಹಿತಿಯನ್ನು ದಾಖಲೆಗಳ ಸಮೇತ ಸಲ್ಲಿಸಲು ಸಿಬಿಎಸ್ಇ ಎಲ್ಲ ಶಾಲೆಗಳಿಗೆ ಸೂಚನೆ ನೀಡಿದೆ.
ಶಾಲೆಗಳು ಸಲ್ಲಿಸುವ ಮಾಹಿತಿಯನ್ನು ಕ್ರೋಡೀಕರಿಸಿದ ನಂತರ, ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಬಿಎಸ್ಇ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
2019ರಲ್ಲಿ ಪ್ರಕಟವಾಗಿರುವ 10 ಹಾಗೂ 12ನೇ ತರಗತಿಗಳ ಫಲಿತಾಂಶ ಸಿಬಿಎಸ್ಇ ಅಧಿಕಾರಿಗಳನ್ನು ಚಿಂತೆಗೀಡು ಮಾಡಿದೆ. ಶಾಲೆಗೆ ಗೈರಾಗುವ ವಿದ್ಯಾರ್ಥಿಗಳನ್ನು ಶಿಕ್ಷಕರು ಕ್ಷಮಿಸಿ, ಅವರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಿರುವುದು ಹಾಗೂ ಇಂತಹ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗಿರುವ ಅಂಶ ಈ ಫಲಿತಾಂಶದ ವಿಶ್ಲೇಷಣೆಯಿಂದ ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷೆ ಸೇರಿದಂತೆ ಶೈಕ್ಷಣಿಕ ವಿಷಯಗಳಿಗೆ ಸಂಬಂಧಿಸಿ ಸಾಮಾನ್ಯ ಕಾರ್ಯ ವಿಧಾನ (ಎಸ್ಒಪಿ) ರಚನೆಗೆ ಸಿಬಿಎಸ್ಇ ಮುಂದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೀರ್ಘಕಾಲದ ಕಾಯಿಲೆ, ಹತ್ತಿರದ ಬಂಧುಗಳ ನಿಧನ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗೈರುಹಾಜರಾಗಬಹುದು. ಇದಕ್ಕೆ ಪೂರಕವಾದ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ. ಆದರೆ, ಬಹುತೇಕ ಶಾಲೆಗಳು ಈ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.