
ಪ್ರಧಾನಿ ನರೇಂದ್ರ ಮೋದಿ ಹಾಗೂ ಜನಗಣತಿಯ ಪ್ರಾತಿನಿಧಿಕ ಚಿತ್ರ
ನವದೆಹಲಿ: ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ 2027ರ ಜನಗಣತಿಗೆ ₹ 11,718 ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ವೈಷ್ಣವ್, ಡಿಜಿಟಲ್ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಎರಡು ಹಂತಗಳಲ್ಲಿ ಜನಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
2026ರ ಏಪ್ರಿಲ್ನಿಂದ ಸೆಪ್ಟೆಂಬರ್ ಅವಧಿಯಲ್ಲಿ ನಡೆಯುವ ಮೊದಲ ಹಂತದ ವೇಳೆ ಮನೆಗಳ ಗಣತಿ ಮಾಡಲಾಗುವುದು. 2027ರ ಫೆಬ್ರುವರಿಯಲ್ಲಿ ಜನರ ಗಣತಿ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
'2027ರ ಜನಗಣತಿಯು ಮೊದಲ ಡಿಜಿಟಲ್ ಗಣತಿಯಾಗಲಿದೆ. ದತ್ತಾಂಶ ಸಂರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಜನಗಣತಿ ಪ್ರಕ್ರಿಯೆಯ ಡಿಜಿಟಲ್ ವಿನ್ಯಾಸವನ್ನು ರೂಪಿಸಲಾಗಿದೆ' ಎಂದು ಒತ್ತಿ ಹೇಳಿದ್ದಾರೆ.
ಜನಗಣತಿ ಕಾರ್ಯದ ಜವಾಬ್ದಾರಿ ವಹಿಸಿಕೊಳ್ಳಲು ಅಗತ್ಯವಾಗಿರುವ ಅಧಿಕಾರಿಗಳ ನೇಮಕಾತಿಯನ್ನು ಜನವರಿ 15ರೊಳಗೆ ಪೂರ್ಣಗೊಳಿಸಬೇಕು ಎಂದು ಭಾರತೀಯ ನೋಂದಣಿಯ ಮಹಾನಿರ್ದೇಶನಾಲಯವು (ಆರ್ಜಿಐ) ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮೊನ್ನೆಯಷ್ಟೇ ನಿರ್ದೇಶನ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.