ಜಾರ್ಗ್ರಾಂ (ಪಶ್ಚಿಮ ಬಂಗಾಳ): ಕೇಂದ್ರ ತನಿಖಾ ಸಂಸ್ಥೆಗಳು ವಿರೋಧ ಪಕ್ಷದವರ ಮೇಲೆ ತ್ವರಿತವಾಗಿ ಕ್ರಮ ಕೈಗೊಳ್ಳುತ್ತವೆ. ಆದರೆ, ಬಿಜೆಪಿಯವರು ಭ್ರಷ್ಟಾ ಚಾರದಲ್ಲಿ ತೊಡಗಿದ್ದರೂ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಶಾಲಾ ಸೇವಾ ಆಯೋಗ (ಎಸ್ಎಸ್ಸಿ) ನಡೆಸಿದ ಶಿಕ್ಷಕರ ನೇಮಕಾತಿ ಹಗರಣದ ಪ್ರಮುಖ ಆರೋಪಿ ಪ್ರಸನ್ನ ರಾಯ್ ಅವರ ನಿವಾಸದಿಂದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಮನೆಯ ಖರೀದಿ ಪತ್ರ ವಶಪಡಿಸಿಕೊಳ್ಳಲಾಗಿದೆ. ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ದಾಖಲೆಗಳು ಸಿಕ್ಕ ನಂತರ ಪಾರ್ಥ ಚಟರ್ಜಿ ಅವರನ್ನು ಬಂಧಿಸಲಾಯಿತು.
ಆದರೆ, ಹಗರಣದ ಆರೋಪಿ ರಾಯ್ ಅವರ ಮನೆಯಿಂದ ಬಿಜೆಪಿ ನಾಯಕನಿಗೆ ಸೇರಿದ ದಾಖಲೆಗಳನ್ನು ವಶಪಡಿಸಿಕೊಂಡ ಬಳಿಕವೂ ಏಕೆ ಬಂಧಿಸಲಿಲ್ಲ? ಕೇಂದ್ರ ತನಿಖಾ ಸಂಸ್ಥೆಗಳು ವಿರೋಧ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಚುರುಕಾಗಿವೆ. ಆದರೆ, ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದು ಏಕೆ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
‘ನಾವು ಯಾವುದೇ ತಪ್ಪು ಮಾಡಿಲ್ಲ, ತನಿಖೆ ನಡೆಸಿದರೆ ಅದನ್ನು ಎದುರಿಸಲು ಸಿದ್ಧ’ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.