ADVERTISEMENT

ಕೋವಿಡ್ ಪರೀಕ್ಷೆ ಹೆಚ್ಚಿಸಲು ಕೇಂದ್ರಾಡಳಿತ ಪ್ರದೇಶಗಳಿಗೆ ಸರ್ಕಾರ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 13:54 IST
Last Updated 20 ಏಪ್ರಿಲ್ 2021, 13:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ(ಪಿಟಿಐ): ದೇಶದಲ್ಲಿನ ಗಂಭೀರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮುಂದಿನ ಮೂರು ವಾರಗಳವರೆಗೆ ಕೋವಿಡ್ -19 ಪರೀಕ್ಷೆ ಹೆಚ್ಚಿಸಲು ಮತ್ತು ಪ್ರಯೋಗಾಲಯ ಹಾಗೂ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸಲು ಕೇಂದ್ರ ಸರ್ಕಾರ ಮಂಗಳವಾರ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ನಡೆಸಿದ ಪರಿಶೀಲನಾ ಸಭೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳ ಉನ್ನತ ಅಧಿಕಾರಿಗಳಿಗೆ ಈ ಸೂಚನೆ ನೀಡಲಾಯಿತು.

ಕೋವಿಡ್‌ಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಿದ ನಂತರ, ಕೇಂದ್ರ ಗೃಹ ಕಾರ್ಯದರ್ಶಿಯವರು, ಕೇಂದ್ರ ಪ್ರಾಂತ್ಯಗಳಲ್ಲಿನ ಗಂಭೀರ ಪರಿಸ್ಥಿತಿಯ ವಿರುದ್ಧ ನಿರಂತರ ಜಾಗರೂಕತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ADVERTISEMENT

ವೈದ್ಯಕೀಯ ನಿರ್ವಹಣೆಯ ತುರ್ತು ಪರಿಶೀಲನೆ ನಡೆಸುವಂತೆ ಶಿಫಾರಸು ಮಾಡಿದ ಕೇಂದ್ರದ ಅಧಿಕಾರಿಗಳು, ಕೋವಿಡ್‌ ಪರಿಕ್ಷೆಗೆ ರ‍್ಯಾಪಿಡ್‌ ಟೆಸ್ಟ್‌, ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಸಲಹೆ ನೀಡಿದರು.

ದೊಡ್ಡ ಸಂಖ್ಯೆಯಲ್ಲಿ ಜನಸಂದಣಿ ಸೇರುವುದನ್ನು ನಿಷೇಧಿಸಬೇಕು, ಚಳವಳಿಗಳನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಬೇಕು ಹಾಗೂ ಮಾರುಕಟ್ಟೆಗಳಿಗೆ ನಿಗದಿತ ಸಮಯ ನಿಗದಿಪಡಿಸಬೇಕು. ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.