ನವದೆಹಲಿ: ಬಾಂಬೆ ಹೈಕೋರ್ಟ್ ನಿವೃತ್ತನ್ಯಾಯಮೂರ್ತಿ ಅಶೋಕ್ ಇಕ್ಬಾಲ್ಸಿಂಗ್ ಚೀಮಾ ಅವರು ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ (ಎನ್ಸಿಎಲ್ಎಟಿ) ಅಧ್ಯಕ್ಷರಾಗಿ ಸೆ.20ರ ವರೆಗೆ ಮುಂದುವರಿಯಲು ಕೇಂದ್ರ ಸರ್ಕಾರ ಗುರುವಾರ ಸಮ್ಮತಿಸಿತು.
ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆ ವೇಳೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠಕ್ಕೆ ಈ ಮಾಹಿತಿ ನೀಡಿದರು.
‘ನ್ಯಾಯಮೂರ್ತಿ ಚೀಮಾ ಅವರು ತಮ್ಮ ಅಧಿಕಾರಾವಧಿ ಮುಗಿಯುವವರೆಗೆ ಎನ್ಸಿಎಲ್ಎಟಿ ಅಧ್ಯಕ್ಷರಾಗಿ ಮುಂದುವರಿಯಲಿದ್ದು, ತೀರ್ಪುಗಳನ್ನು ಸಹ ಪ್ರಕಟಿಸಬಹುದು. ಹಂಗಾಮಿ ಅಧ್ಯಕ್ಷರಾಗಿರುವ ನ್ಯಾಯಮೂರ್ತಿ ವೇಣುಗೋಪಾಲ್ ಅವರನ್ನು ರಜೆ ಮೇಲೆ ಕಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ’ ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿ ಎನ್.ವಿ ರಮಣ, ‘ಪ್ರಕರಣವನ್ನು ಮುಕ್ತಾಯಗೊಳಿಸುತ್ತೇವೆ’ ಎಂದರು.
ನ್ಯಾಯಮಂಡಳಿಗೆ ತರಾತುರಿಯಲ್ಲಿ ನೇಮಕಾತಿ ಮಾಡಿರುವುದಕ್ಕೆ ಸುಪ್ರೀಂಕೋರ್ಟ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.