ADVERTISEMENT

ಬಾಂಬ್‌ ಸ್ಫೋಟ ಪ್ರಕರಣ: ತನಿಖೆಗೆ ಕೇಂದ್ರದ ನೆರವು ಕೋರಿದ ಪಂಜಾಬ್ ಸಿಎಂ ಚನ್ನಿ

ಪಿಟಿಐ
Published 24 ಡಿಸೆಂಬರ್ 2021, 10:47 IST
Last Updated 24 ಡಿಸೆಂಬರ್ 2021, 10:47 IST
ಚರಣ್‌ಜಿತ್‌ ಸಿಂಗ್‌ ಚನ್ನಿ
ಚರಣ್‌ಜಿತ್‌ ಸಿಂಗ್‌ ಚನ್ನಿ   

ಚಂಡೀಗಡ: ಲುಧಿಯಾನ ನ್ಯಾಯಾಲಯದ ಆವರಣದಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಗೆ ಕೇಂದ್ರದ ಸಹಕಾರ ಕೇಳಲಾಗಿದೆ ಎಂದು ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಜೊತೆ ಈ ಬಗ್ಗೆ ಮಾತುಕತೆ ನಡೆಸಿದ ನಂತರ ಪ್ರಕರಣದ ತನಿಖೆಗೆ ಕೇಂದ್ರ ಸರ್ಕಾರವು ಪಂಜಾಬ್‌ಗೆ ತನಿಖಾ ತಂಡಗಳನ್ನು ಕಳುಹಿಸಿದೆ ಎಂದು ಅವರು ತಿಳಿಸಿದ್ದಾರೆ.

ಲುಧಿಯಾನದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಸಂಭವಿಸಿದ ಬಾಂಬ್‌ ಸ್ಫೋಟದಲ್ಲಿ ಒಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಪಂಜಾಬ್‌ ಸರ್ಕಾರ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದೆ. ನ್ಯಾಯಾಲಯದ ಎರಡನೇ ಮಹಡಿಯ ಶೌಚಾಲಯದಲ್ಲಿ ಸ್ಫೋಟ ಸಂಭವಿಸಿದ್ದು, ಇಲ್ಲಿ ಮೃತಪಟ್ಟ ವ್ಯಕ್ತಿಯು ಸ್ಫೋಟಕ ಸಾಧನವನ್ನು ಇಡಲು ಅಥವಾ ಜೋಡಿಸಲು ಪ್ರಯತ್ನಿಸಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ.

ADVERTISEMENT

ಘಟನೆಗೆ ಗುಪ್ತಚರ ದಳದ ವೈಫಲ್ಯ ಕಾರಣ ಎಂಬುದನ್ನು ಚನ್ನಿ ನಿರಾಕರಿಸಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಈ ಸ್ಫೋಟ ನಡೆಸಲಾಗಿದೆ ಎಂದು ಅವರು ಗುರುವಾರ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.