ನವದೆಹಲಿ: ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ವಹಿಸಿಕೊಂಡಿದೆ.
ಉತ್ತರ ಪ್ರದೇಶದ ಹಾಥರಸ್ನಲ್ಲಿ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ಪ್ರಕರಣದ ತನಿಖೆಗಾಗಿ ಸಿಬಿಐಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಅಧಿಸೂಚನೆಯಲ್ಲಿ ಸಿಬಿಐನ ಸೂಕ್ತ ಶಾಖೆಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಎಫ್ಐಆರ್ ನೋಂದಣಿ ಮಾಡಿದ ಕೂಡಲೇ ವಿಧಿವಿಜ್ಞಾನ ತಜ್ಞರೊಂದಿಗೆ ತನಿಖಾ ತಂಡಗಳನ್ನು ಅಪರಾಧ ನಡೆದ ಸ್ಥಳಕ್ಕೆ ರವಾನಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸೆಪ್ಟೆಂಬರ್ 29ರಂದುಠಾಕೂರ್ ಜಾತಿಗೆ ಸೇರಿದವರು ಎನ್ನಲಾದನಾಲ್ವರು ಆರೋಪಿಗಳಿಂದ ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆಗೀಡಾಗಿದ್ದ ಯುವತಿಯನ್ನು ದೆಹಲಿಯ ಸಪ್ಧರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎರಡು ವಾರಗಳ ಬಳಿಕ ಆಕೆ ಕೊನೆಯುಸಿರೆಳೆದಿದ್ದಳು. ಅದೇ ದಿನ ತಡ ರಾತ್ರಿ ಪೋಷಕರಿಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡದೆ ಪೊಲೀಸರೇ ಅಂತ್ಯಸಂಸ್ಕಾರ ನಡೆಸಿದ್ದರು. ಇದು ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.
ಸಾಮೂಹಿಕ ಅತ್ಯಾಚಾರ ಪ್ರಕರಣದ ಹೊರತಾಗಿಯೂ ಪ್ರಕರಣದ ಹಿಂದೆ ಜಾತಿ ಸಾಮರಸ್ಯವನ್ನು ಕದಡಲು ಕ್ರಿಮಿನಲ್ ಪಿತೂರಿ, ಹಿಂಸಾಚಾರ ಪ್ರಚೋದನೆ, ಮಾಧ್ಯಮಗಳಿಂದ ಕೆಟ್ಟ ಪ್ರಚಾರ ಮತ್ತು ರಾಜಕೀಯ ಹಿತಾಸಕ್ತಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸುವಂತೆ ಉತ್ತರ ಪ್ರದೇಶ ಸರ್ಕಾರವು ಕೇಂದ್ರ ತನಿಖಾ ದಳವನ್ನು ಕೋರಿದೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.