ನವದೆಹಲಿ: ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳನ್ನು ನೇಣಿಗೇರಿಸಲು 7 ದಿನಗಳ ಗಡುವು ನಿಗದಿಪಡಿಸಲು ಕೋರಿ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಮರುಪರಿಶೀಲನಾ ಅರ್ಜಿ ವಜಾಗೊಂಡ ಏಳು ದಿನಗಳ ಒಳಗೆ ಪರಿಹಾರಾತ್ಮಕ ಅರ್ಜಿ ಸಲ್ಲಿಸಲು ಗಡುವು ವಿಧಿಸಲು ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ಗೆ ಗೃಹ ಸಚಿವಾಲಯ ಮನವಿ ಮಾಡಿದೆ.
ನಿರ್ಭಯಾ ಪ್ರಕರಣದಲ್ಲಿ ಗಲ್ಲಿಗೆ ಗುರಿಯಾಗಿರುವವರು ಮರುಪರಿಶೀಲನಾ ಅರ್ಜಿ, ಪರಿಹಾರಾತ್ಮಕ (ಕ್ಯುರೇಟಿವ್) ಅರ್ಜಿಗಳನ್ನು ಸಲ್ಲಿಸಿರುವುದರಿಂದ ಶಿಕ್ಷೆ ಜಾರಿಗೊಳಿಸುವುದು ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ಗೆ ಗೃಹ ಸಚಿವಾಲಯ ಸಲ್ಲಿಸಿರುವ ಅರ್ಜಿ ಮಹತ್ವ ಪಡೆದುಕೊಂಡಿದೆ.
‘ಗಲ್ಲುಶಿಕ್ಷೆಗೆ ಗುರಿಯಾದವರು ಕ್ಷಮಾದಾನ ಅರ್ಜಿ ಸಲ್ಲಿಸಲು ಬಯಸುವುದಾದರೆ, ಶಿಕ್ಷೆ ಜಾರಿಯಾದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು. ಒಂದು ವೇಳೆ ಕ್ಷಮಾದಾನ ಅರ್ಜಿ ವಜಾಗೊಂಡರೆ, ಆ ದಿನದಿಂದ ಏಳು ದಿನಗಳ ಒಳಗೆ ಸಂಬಂಧಪಟ್ಟ ನ್ಯಾಯಾಲಯ, ರಾಜ್ಯ ಸರ್ಕಾರ, ಜೈಲು ಅಧಿಕಾರಿಗಳು ಕಡ್ಡಾಯವಾಗಿ ಮರಣದಂಡನೆ ವಾರಂಟ್ ಜಾರಿಗೊಳಿಸಬೇಕು. ವಾರಂಟ್ ಜಾರಿಯಾದ ದಿನದಿಂದ ಏಳು ದಿನಗಳ ಒಳಗಾಗಿ ಗಲ್ಲುಶಿಕ್ಷೆ ಜಾರಿಗೊಳಿಸಬೇಕು. ಅರ್ಜಿ ಸಲ್ಲಿಸಿದವರ ಜತೆಗಿನ ಅಪರಾಧಿಗಳ ಕ್ಷಮಾದಾನ ಅರ್ಜಿ ಯಾವುದೇ ಹಂತದಲ್ಲಿದ್ದರೂ, ಅದನ್ನು ಪರಿಗಣಿಸುವಂತಿಲ್ಲ’ ಎಂದು ಗೃಹ ಸಚಿವಾಲಯ ಮನವಿ ಮಾಡಿದೆ.
ನಿರ್ಭಯಾ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ನಿಂದ ಗಲ್ಲುಶಿಕ್ಷೆಗೆ ಗುರಿಯಾಗಿರುವ ಪವನ್ ಗುಪ್ತಾ, ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೇ 20ರಂದು ವಜಾಗೊಳಿಸಿದೆ.
ಅರ್ಜಿಗಳು ಬಾಕಿ ಇರುವುದರಿಂದಾಗಿ ಈ ಮೊದಲಿನ ಆದೇಶದಂತೆ ಜ.22ರಂದು ಗಲ್ಲುಶಿಕ್ಷೆ ಜಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ, ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31), ಮುಖೇಶ್ ಕುಮಾರ್ ಸಿಂಗ್ (32) ಹಾಗೂ ಪವನ್ (26) ವಿರುದ್ಧ ದೆಹಲಿ ಹೈಕೋರ್ಟ್ ಈಚೆಗಷ್ಟೆ ಹೊಸದಾಗಿ ಮರಣದಂಡನೆ ವಾರಂಟ್ ಜಾರಿಗೊಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.