ADVERTISEMENT

ಕೋವಿಡ್ ಪ್ರಕರಣ ಹೆಚ್ಚಿರುವ ಆರು ರಾಜ್ಯಗಳಿಗೆ ಕೇಂದ್ರ ತಂಡ ನಿಯೋಜನೆ

ಪಿಟಿಐ
Published 2 ಜುಲೈ 2021, 9:34 IST
Last Updated 2 ಜುಲೈ 2021, 9:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೋವಿಡ್-19 ಸೋಂಕು ಪ್ರಕರಣಗಳು ಆರು ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು, ಕೇರಳ, ಅರುಣಾಚಲ ಪ್ರದೇಶ, ತ್ರಿಪುರ, ಒಡಿಶಾ, ಛತ್ತೀಸಗಡ ಮತ್ತು ಮಣಿಪುರಕ್ಕೆ ತಜ್ಞರ ತಂಡಗಳನ್ನು ನಿಯೋಜಿಸಿದೆ.

ಈ ತಂಡಗಳು ಕೋವಿಡ್ ನಿರ್ವಹಣೆಯಲ್ಲಿ ರಾಜ್ಯಗಳಿಗೆ ಸಹಾಯ ಮಾಡಲಿದ್ದು, ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ನೆರವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಇಬ್ಬರು ಸದಸ್ಯರ ಉನ್ನತ ಮಟ್ಟದ ತಂಡವು ವೈದ್ಯ ಮತ್ತು ಸಾರ್ವಜನಿಕ ಆರೋಗ್ಯ ತಜ್ಞರನ್ನು ಒಳಗೊಂಡಿದೆ ಎಂದು ಪ್ರಕಟಣೆಯು ತಿಳಿಸಿದೆ.

ರಾಜ್ಯಗಳಿಗೆ ಭೇಟಿ ನೀಡಲಿರುವ ಕೇಂದ್ರ ತಂಡವು, ಒಟ್ಟಾರೆ ಕೋವಿಡ್ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲಿದ್ದು, ಸೂಕ್ತ ಕ್ರಮವನ್ನು ಸೂಚಿಸಲಿದೆ. ಸೋಂಕಿತರ ಪರೀಕ್ಷೆ, ಕಂಟೋನ್ಮೆಟ್‌ ವಲಯ, ಕೋವಿಡ್ ನಿರ್ವಹಣೆ ಮತ್ತು ಅದರ ಜಾರಿ, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ, ಆಂಬ್ಯುಲೆನ್ಸ್, ವೆಂಟಿಲೇಟರ್, ವೈದ್ಯಕೀಯ ಆಮ್ಲಜನಕ ಪೂರೈಕೆ ಸೇರಿದಂತೆ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಮೇಲ್ವಿಚಾರಣೆ ನಡೆಸಲಿದೆ.

ಒಟ್ಟಾರೆ ಪರಿಸ್ಥಿತಿಯನ್ನು ಅವಲೋಕಿಸಲಿರುವ ಕೇಂದ್ರ ತಂಡವು ಸಾರ್ವಜನಿಕ ಆರೋಗ್ಯ ಚಟುವಟಿಕೆಗಳ ಪರಿಹಾರ ಕ್ರಮಗಳನ್ನು ಆಯಾ ರಾಜ್ಯ ಸರ್ಕಾರಗಳಿಗೆ ಸೂಚಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.