ADVERTISEMENT

ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ, ನವಮಾಧ್ಯಮ ನಿಯಂತ್ರಣಕ್ಕೆ ಕಾನೂನು: ಠಾಕೂರ್

ಪಿಟಿಐ
Published 24 ನವೆಂಬರ್ 2022, 3:19 IST
Last Updated 24 ನವೆಂಬರ್ 2022, 3:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ್:‘ದೇಶದಲ್ಲಿನ ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯನಿರ್ವಹಣೆ ಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ’ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

‘ವಿಶೇಷವಾಗಿ ಡಿಜಿಟಲ್ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಪತ್ರಕರ್ತರಿಗೆ ಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವ ಬಗ್ಗೆ ಚಿಂತಿಸಲಾಗುತ್ತಿದೆ. ಕೋವಿಡ್‌ನಿಂದ ಮೃತಪಟ್ಟ ಎಲ್ಲ ಪತ್ರಕರ್ತರಿಗೆ ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ’ ಎಂದು ಅವರು ಜೈಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದರು.

‘ಸದ್ಯ ದೇಶದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉತ್ತಮ ಭವಿಷ್ಯವಿದೆ ಹಾಗೂ ಸವಾಲುಗಳು ಕೂಡ ಇವೆ. ಇವೆರಡನ್ನು ಸರಿದೂಗಿಸಲು ಹೊಸ ಕಾನೂನಿನ ಅವಶ್ಯಕತೆ ಇದೆ’ ಎಂದು ಠಾಕೂರ್ ತಿಳಿಸಿದರು.

ADVERTISEMENT

‘ಇನ್ನು ಮುಂದೆ ಪತ್ರಿಕೆಗಳ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು. ಕೇಂದ್ರ ಸರ್ಕಾರವು ಪ್ರೆಸ್ ಮತ್ತು ರಿಜಿಸ್ಟ್ರೇಶನ್ ಕಾಯ್ದೆ 1867ರ ಬದಲಿಗೆ ಹೊಸ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ. ಇದರಿಂದ ಒಂದು ವಾರದಲ್ಲಿ ನೋಂದಣಿಗೆ ಅವಕಾಶ ನೀಡಲಾಗುವುದು. ಇದು ಸದ್ಯ ನಾಲ್ಕು ತಿಂಗಳು ತೆಗೆದುಕೊಳ್ಳುತ್ತದೆ. ಮುದ್ರಣ, ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮಕ್ಕೆ ಸಂಬಂಧಿಸಿದ ನೀತಿ ನಿರೂಪಣೆಗಳನ್ನು ಒಂದೇ ಸೂರಿನಡಿ ತರಲಾಗುವುದು ಎಂದು ಹೇಳಿದರು.

ಪತ್ರಿಕೆಗಳು ಸರಿಯಾದ ಸುದ್ದಿಗಳನ್ನು ಜನಸಾಮಾನ್ಯರ ಮುಂದೆ ಸರಿಯಾದ ಸಮಯದಲ್ಲಿ ತೆರೆದಿಡಬೇಕು.ಸರ್ಕಾರದ ಲೋಪದೋಷಗಳ ಜತೆಗೆ ಸರ್ಕಾರದ ಜನಕಲ್ಯಾಣ ಯೋಜನೆಗಳು, ನೀತಿಗಳು ಸಹ ಜನಸಾಮಾನ್ಯರಿಗೆ ತಲುಪಬೇಕು ಎಂದು ಕಿವಿಮಾತು ಹೇಳಿದರು.

ಮಾಧ್ಯಮಗಳು ಹೆಚ್ಚು ಜವಾಬ್ದಾರಿಯಿಂದ ಕೆಲಸವನ್ನು ಮಾಡಬೇಕು ಸಮಾಜದಲ್ಲಿ ಭಯ ಮತ್ತು ಗೊಂದಲದ ವಾತಾವರಣ ನಿರ್ಮಾಣ ಮಾಡುವುದನ್ನು ತಪ್ಪಿಸಬೇಕು ಎಂದು ಅವರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.