ADVERTISEMENT

ಎಎಪಿ ಸರ್ಕಾರದ ಕಾರ್ಯಕ್ರಮ ಹೈಜಾಕ್ ಮಾಡಲು ಕೇಂದ್ರ ಯತ್ನ: ಸಚಿವ ಗೋಪಾಲ್‌ ರೈ

ದೆಹಲಿ ಪರಿಸರ ಸಚಿವ ಗೋಪಾಲ್‌ ರೈ ಆರೋಪ

ಪಿಟಿಐ
Published 24 ಜುಲೈ 2022, 11:52 IST
Last Updated 24 ಜುಲೈ 2022, 11:52 IST
ಗೋಪಾಲ್‌ ರೈ
ಗೋಪಾಲ್‌ ರೈ   

ನವದೆಹಲಿ: ‘ಅಸೋಲಾ ವನ್ಯಜೀವಿ ಅಭಯಾರಣ್ಯದಲ್ಲಿ ದೆಹಲಿಯ ಎಎಪಿ ನೇತೃತ್ವದ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಹೈಜಾಕ್‌ ಮಾಡಲು ಪ್ರಯತ್ನಿಸುತ್ತಿದೆ. ಕಾರ್ಯಕ್ರಮ ನಿಗದಿಯಾದ ಸ್ಥಳದಲ್ಲಿ ಕಳೆದ ರಾತ್ರಿ ಪೊಲೀಸರು ಪ್ರಧಾನಿ ನರೇಂದ್ರ ಮೋದಿ ಅವರಿರುವ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ’ ಎಂದು ಪರಿಸರ ಸಚಿವ ಗೋಪಾಲ್‌ ರೈ ಭಾನುವಾರ ಆರೋಪಿಸಿದರು.

ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾಗಿಯಾಗಬೇಕಿತ್ತು. ಆದರೆ ಈಗ ಅವರು ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.

ಕಳೆದ ರಾತ್ರಿ ಪೊಲೀಸರು ಕಾರ್ಯಕ್ರಮ ನಿಗದಿಯಾದ ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.ಎಎಪಿ ಸರ್ಕಾರದ ಬ್ಯಾನರ್‌ಗಳನ್ನು ಹರಿದು ಹಾಕಿ, ಪ್ರಧಾನಿ ಮೋದಿ ಅವರಿರುವ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ. ಪ್ರಧಾನಿ ಮೋದಿ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಮುಟ್ಟದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.ಕೇಜ್ರಿವಾಲ್ ಸರ್ಕಾರದ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಅವರ ರಾಜಕೀಯ ಕಾರ್ಯಕ್ರಮವಾಗಿ ಪರಿವರ್ತಿಸಿದ್ದಾರೆ. ದೆಹಲಿ ಪೊಲೀಸರು ಪ್ರಧಾನಿ ಕಾರ್ಯಾಲಯದ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ADVERTISEMENT

‘ಕೇಜ್ರಿವಾಲ್‌ ಅವರಿಗೆ ಪ್ರಧಾನಿ ಮೋದಿ ಹೆದರಿರುವುದರ ಸೂಚಕ ಈ ಘಟನೆ.ಆಮ್‌ ಆದ್ಮಿ ಸರ್ಕಾರದ ವಿರುದ್ಧ ಅಪಪ್ರಚಾರದ ಪ್ರಯತ್ನಗಳು ನಡೆಯುತ್ತಿವೆ. ಸತ್ಯೇಂದ್ರ ಜೈನ್ ಅವರನ್ನು ಸುಳ್ಳು ಆರೋಪದ ಮೇಲೆ ಬಂಧಿಸಲಾಗಿದೆ. ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಬಂಧಿಸುವ ಪಿತೂರಿ ನಡೆಸಲಾಗುತ್ತಿದೆ. ಪೊಲೀಸರು ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗಾಗಿ ಇರಬೇಕು, ಪ್ರಧಾನಿ ಮೋದಿ ಭಾವಚಿತ್ರದ ಬ್ಯಾನರ್‌ ಅಳವಡಿಸಲು ಅಲ್ಲ’ ಎಂದು ತೀಕ್ಷ್ಣವಾಗಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.