ನವದೆಹಲಿ: ವಿವಿಧ ರೈತ ಸಂಘಟನೆಗಳು ಕೃಷಿ ಕಾಯ್ದೆಗಳ ರದ್ದುಗೊಳಿಸಲು ಒತ್ತಾಯಿಸಿ ಜ.26ರಂದು ನಡೆಸಲು ಉದ್ದೇಶಿಸಿರುವ ‘ಟ್ರ್ಯಾಕ್ಟರ್ ರ್ಯಾಲಿ‘ಗೆ ತಡೆಯಾಜ್ಞೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆದಿದೆ.
‘ಗಣರಾಜ್ಯೋತ್ಸವದ ದಿನದಂದು ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿ ವಿಚಾರವನ್ನು ಪೊಲೀಸರು ಇತ್ಯರ್ಥಪಡಿಸಬೇಕು‘ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ ಹೇಳಿದ ನಂತರ, ರ್ಯಾಲಿಗೆ ತಡೆಯಾಜ್ಞೆ ನೀಡುವಂತೆ ಕೋರಿ ದೆಹಲಿ ಪೊಲೀಸರ ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಪೀಠ, ‘ಈ ರ್ಯಾಲಿ ವಿಷಯಕ್ಕೆ ಸಂಬಂಧಿಸಿದಂತೆ ನಾವು ಯಾವುದೇ ನಿರ್ದೇಶನ ನೀಡುವುದಿಲ್ಲ. ಇದು ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿಷಯವಾಗಿದೆ. ನೀವು ಅರ್ಜಿಯನ್ನು ಹಿಂದೆತೆಗೆದುಕೊಳ್ಳಲು ಅವಕಾಶ ನೀಡುತ್ತೇವೆ‘ ಎಂದು ತಿಳಿಸಿದೆ.
‘ಈ ವಿಷಯವನ್ನು ಇತ್ಯರ್ಥಪಡಿಸಲು ನಿಮಗೆ ಅಧಿಕಾರವಿದೆ. ಈ ಸಂಬಂಧ ನ್ಯಾಯಾಲಯ ಯಾವುದೇ ಆದೇಶಗಳನ್ನು ನೀಡುವುದಿಲ್ಲ‘ ಎಂದು ನ್ಯಾಯಪೀಠ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.