ಅಹಮದಾಬಾದ್: ‘ನಮ್ಮ ಪಾಲಿನ ನದಿ ನೀರು ಪಾಕಿಸ್ತಾನಕ್ಕೆ ಹರಿಯದಂತೆ ತಡೆಯಲು ಕೇಂದ್ರ ಸರ್ಕಾರವು ಚಿಂತಿಸುತ್ತಿದೆ’ ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಗುಜರಾತ್ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ‘ಜನ ಸಂವಾದ’ ವರ್ಚುವಲ್ ರ್ಯಾಲಿಯಲ್ಲಿ ಮಹಾರಾಷ್ಟ್ರದ ನಾಗಪುರದಿಂದ ಮಾತನಾಡಿರುವ ಅವರು ‘ಒಟ್ಟು ಆರು ನದಿಗಳು ಭಾರತ ಮತ್ತು ಪಾಕಿಸ್ತಾನದ ಮೂಲಕ ಹಾದು ಹೋಗುತ್ತವೆ. ಈ ಪೈಕಿ ತಲಾ ಮೂರು ನದಿಗಳ ನೀರನ್ನು ಉಭಯ ದೇಶಗಳು ಬಳಕೆ ಮಾಡಬಹುದಾಗಿದೆ. ಸದ್ಯ, ನಮ್ಮ ಪಾಲಿನ ನೀರು ಪಾಕ್ನತ್ತ ಹರಿದು ಹೋಗುತ್ತಿದೆ’ ಎಂದು ತಿಳಿಸಿದ್ದಾರೆ.
‘ಪಾಕ್ಗೆ ನದಿ ನೀರು ಹರಿಯುವುದನ್ನು ನಿಲ್ಲಿಸಿದರೆ, ಕಾಶ್ಮೀರ, ಪಂಜಾಬ್, ರಾಜಸ್ಥಾನ, ನವದೆಹಲಿ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದ ಜನರಿಗೆ ಅನುಕೂಲವಾಗಲಿದೆ. ಈ ಸಂಬಂಧ ಒಪ್ಪಂದಕ್ಕೆ ಸಹಿ ಮಾಡುವಂತೆ ಜಮ್ಮು ಮತ್ತು ಕಾಶ್ಮೀರದ ಹಿಂದಿನ ರಾಜ್ಯಪಾಲ ಸತ್ಯಪಾಲ್ ಮಲಿಕ್ ಮತ್ತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಗೆ ನಾನು ಮನವಿ ಮಾಡಿದ್ದೆ. ಜನರ ಹಿತ ಕಾಯಲು ನಾವು ಬದ್ಧರಾಗಿದ್ದೇವೆ. ಹೀಗಾಗಿಯೇ ನಮ್ಮ ಸರ್ಕಾರವು ದಿಟ್ಟ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಹಿಂದಿದ್ದ ಸರ್ಕಾರಗಳಿಂದ ಆಗದಿದ್ದನ್ನು ನಾವು ಮಾಡಿ ತೋರಿಸುತ್ತೇವೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.