ನವದೆಹಲಿ: ಬೇರೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯವು, ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಪತ್ತೆ ಪರೀಕ್ಷೆಗಳನ್ನು ಕಡಿಮೆ ಮಾಡಿರುವುದಕ್ಕೆ ಕಳವಳ ವ್ಯಕ್ತಪಡಿಸಿದೆ.
ವಿವಾಹ ಸಮಾರಂಭಗಳು, ಹಬ್ಬಗಳು ಮತ್ತು ರಜಾದಿನಗಳಲ್ಲಿನ ಪ್ರಯಾಣದ ವಿವರಗಳನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಪರೀಕ್ಷಾ ಸಂಖ್ಯೆಗಳನ್ನು ಹೆಚ್ಚಿಸುವಂತೆ ಕೇರಳ, ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಿಗೆ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.
‘ಪರೀಕ್ಷಾ ಸಂಖ್ಯೆ ಇಳಿಕೆಯಾಗುತ್ತಿರುವುದರಿಂದ ಸೋಂಕಿನ ಹರಡುವಿಕೆಯನ್ನು ನಿರ್ಧರಿಸುವುದು ಕಷ್ಟವಾಗುತ್ತದೆ. ಅಭಿವೃದ್ಧಿ ಹೊಂದಿರುವ ಕೆಲವು ದೇಶಗಳು ಕೋವಿಡ್ನ ನಾಲ್ಕನೇ ಮತ್ತು ಐದನೇ ಅಲೆಯನ್ನು ಎದುರಿಸುತ್ತಿವೆ. ಸಾಂಕ್ರಾಮಿಕ ರೋಗದ ಈ ಅನಿರೀಕ್ಷಿತ ಮತ್ತು ಸಾಂಕ್ರಾಮಿಕ ಸ್ವರೂಪವನ್ನು ಗಮನಿಸಿದರೆ ನಿರಂತರ ಜಾಗರೂಕತೆಯ ಅವಶ್ಯಕತೆ ಇದೆ’ ಎಂದು ಅವರು ಪತ್ರದಲ್ಲಿ ಒತ್ತಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.