ಆರ್.ಜಿ. ಕರ್ ಆಸ್ಪತ್ರೆಯಲ್ಲಿ ಸಿಐಎಸ್ಎಫ್ ತಂಡದಿಂದ ಪರಿಶೀಲನೆ
(ಪಿಟಿಐ)
ನವದೆಹಲಿ: ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ನಿಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬುಧವಾರ ಪತ್ರ ಬರೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಸರ್ಕಾರಿ ಸ್ವಾಮ್ಯದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಿಡಿಗೇಡಿಗಳ ವಿಧ್ವಂಸಕ ಕೃತ್ಯವನ್ನು ತಡೆಯದ ಪಶ್ಚಿಮ ಬಂಗಾಳ ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿತು. ಅಲ್ಲದೆ ವೈದ್ಯರ ಭದ್ರತೆಗೆ ಸಿಐಎಸ್ಎಫ್ ನಿಯೋಜಿಸುವಂತೆ ನಿರ್ದೇಶನ ನೀಡಿತ್ತು.
ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಗೃಹ ಸಚಿವಾಲಯವು (ಎಂಎಚ್ಎ) ಕ್ರಮ ಕೈಗೊಂಡಿದೆ. ಸಿಐಎಸ್ಎಫ್ ಪಡೆ ವೈದ್ಯರ ಹಾಸ್ಟೆಲ್ಗೂ ಭದ್ರತೆಯನ್ನು ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ.
31 ವರ್ಷದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ನಡೆದ ಆರ್.ಜಿ. ಕರ್ ಆಸ್ಪತ್ರೆಯ ಸಂಕೀರ್ಣವನ್ನು ಡಿಐಜಿ ಶ್ರೇಣಿಯ ಅಧಿಕಾರಿಯ ನೇತೃತ್ವದ ಸಿಐಎಸ್ಎಫ್ ತಂಡ ಪರಿಶೀಲನೆ ನಡೆಸಿತು.
ಘಟನೆ ಸಂಬಂಧ ದೇಶದೆಲ್ಲೆಡೆ ವ್ಯಾಪಕ ಪ್ರತಿಭಟನೆ ನಡೆದಿದೆ. ಇದರಿಂದ ದೇಶದಾದ್ಯಂತ ವೈದ್ಯಕೀಯ ಸೇವೆಗಳ ಮೇಲೂ ಪರಿಣಾಮ ಬೀರಿದೆ.
ವೈದ್ಯರು ಹಾಗೂ ಆರೋಗ್ಯ ಸೇವೆಗಳನ್ನು ಒದಗಿಸುವ ಇತರ ವೃತ್ತಿಪರರ ಸುರಕ್ಷತೆಗಾಗಿ ನಿಯಮಗಳನ್ನು ರೂಪಿಸಲು 10 ಮಂದಿ ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯನ್ನು ಸುಪ್ರೀಂ ಕೋರ್ಟ್ ರಚಿಸಿದೆ. ಈ ಸಮಿತಿಯು ಮೂರು ವಾರಗಳಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸಬೇಕಿದೆ. ಅಂತಿಮ ವರದಿ ಸಲ್ಲಿಕೆಗೆ ಎರಡು ತಿಂಗಳ ಗಡುವು ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.