ADVERTISEMENT

ವಲಸೆ ಕಾರ್ಮಿಕರಿಗೆ ಆರ್ಥಿಕ ನೆರವು ನೀಡುವುದು ಕೇಂದ್ರದ ಜವಾಬ್ದಾರಿ: ರಾಹುಲ್ ಗಾಂಧಿ

ಪಿಟಿಐ
Published 20 ಏಪ್ರಿಲ್ 2021, 6:37 IST
Last Updated 20 ಏಪ್ರಿಲ್ 2021, 6:37 IST
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ   

ನವದೆಹಲಿ: ದೆಹಲಿಯಲ್ಲಿ ಸೋಮವಾರ ರಾತ್ರಿಯಿಂದ ಆರು ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ ನಂತರ, ಸಾವಿರಾರು ಕಾರ್ಮಿಕರು ಸಂಕಷ್ಟದಲ್ಲಿ ಸಿಲುಕಿದ್ದು, ಕೇಂದ್ರ ಸರ್ಕಾರ ಅವರೆಲ್ಲರಿಗೂ ಆರ್ಥಿಕ ನೆರವು ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಲಾಕ್‌ಡೌನ್ ಘೋಷಣೆಯಾಗುತ್ತಿದ್ದಂತೆ ಸಾವಿರಾರು ಮಂದಿ ವಲಸೆ ಕಾರ್ಮಿಕರು ಸೋಮವಾರ ತಮ್ಮ ತಮ್ಮ ಊರುಗಳಿಗೆ ತೆರಳಲು ದೆಹಲಿಯ ಆನಂದ ವಿಹಾರ ಬಸ್‌ ಟರ್ಮಿನಲ್‌ ಬಳಿ ಜಮಾಯಿಸಿದ್ದರು. ಕೆಲಸವೂ ಇಲ್ಲದೇ, ದುಡಿಮೆಯಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಈ ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

‘ಒಂದು ಕಡೆ ಕಾರ್ಮಿಕರು ವಲಸೆ ಹೊರಟಿದ್ದರೆ, ಮತ್ತೊಂದೆಡೆ ಸರ್ಕಾರವು ಜನರೇ ಕೊರೊನಾ ಸೋಂಕನ್ನು ಹರಡುತ್ತಿದ್ದಾರೆ ಎಂದು ದೂರುತ್ತಿದೆ. ಇಂಥ ಸರ್ಕಾರದಿಂದ ಸಾರ್ವಜನಿಕರಿಗೆ ನೆರವು ಸಿಗಲು ಹೇಗೆ ಸಾಧ್ಯ‘ ಎಂದು ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ‘ ಕೋವಿಡ್‌ ಸ್ಥಿತಿ ಭಯ ಹುಟ್ಟಿಸುತ್ತಿದೆ. ಇದು ಕೇಂದ್ರ ಸರ್ಕಾರ ಸೂಕ್ತ ಸಮಯದಲ್ಲಿ ಲಾಕ್‌ಡೌನ್‌ನಂತಹ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆದರೆ ವಲಸೆ ಕಾರ್ಮಿಕರು ಮತ್ತೆ ನಗರಗಳನ್ನು ಬಿಟ್ಟು ತಮ್ಮೂರಿನತ್ತ ಹೊರಟಿದ್ದಾರೆ‘ ಎಂದು ಟ್ವೀಟ್‌ ಮಾಡಿದ್ದಾರೆ.

‘ನಿಮ್ಮ ಪ್ಲಾನ್ ಇದೇನಾ ? ಸರ್ಕಾರದ ನೀತಿಗಳು ಪ್ರತಿಯೊಬ್ಬರನ್ನೂ ರಕ್ಷಿಸುವಂತಿರಬೇಕು. ಸದ್ಯ ಬಡವರು, ಕಾರ್ಮಿಕರು ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಅಗತ್ಯವಾಗಿ ಆರ್ಥಿಕ ನೆರವು ಬೇಕಾಗಿದೆ. ದಯವಿಟ್ಟು, ಅವರಿಗೆ ನೆರವಾಗಿ‘ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.