ADVERTISEMENT

ಮೈತ್ರಿ ಮಾತುಕತೆ: ಇಂದು ರಾಹುಲ್‌ ಗಾಂಧಿ ಭೇಟಿಯಾಗಲಿರುವ ಚಂದ್ರಬಾಬು ನಾಯ್ಡು

ಏಜೆನ್ಸೀಸ್
Published 1 ನವೆಂಬರ್ 2018, 1:28 IST
Last Updated 1 ನವೆಂಬರ್ 2018, 1:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಗುರುವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸೇರಿದಂತೆ ಇತರೆ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗಿ ಮೈತ್ರಿ ಮಾತುಕತೆ ನಡೆಸಲಿದ್ದಾರೆ.

ಡಿಸೆಂಬರ್‌ನಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಸಜ್ಜಾಗುವ ಹಾಗೂ ಸೀಟು ಹಂಚಿಕೆಗೆ ಸಂಬಂಧಿಸಿ ಕಾಂಗ್ರೆಸ್‌ ಹಾಗೂ ಟಿಡಿಪಿ(ತೆಲುಗು ದೇಶಂ ಪಾರ್ಟಿ) ನಾಯಕರು ಚರ್ಚಿಸಲಿದ್ದಾರೆ.

ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌, ಇತರೆ ಪಕ್ಷಗಳ ಜತೆ ಮಾಡಿಕೊಳ್ಳುತ್ತಿರುವ ಎರಡನೇ ಪ್ರಮುಖ ಮೈತ್ರಿ ಇದಾಗಲಿದೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಧಿಕಾರಉಳಿಸಿಕೊಳ್ಳಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನೇತೃತ್ವದ ಜಾತ್ಯತೀತ ಜನತಾ ದಳ (ಜೆಡಿಎಸ್‌) ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.

ADVERTISEMENT

ತೆಲಂಗಾಣದಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಇದಕ್ಕೆ ಪೂರಕವಾಗಿಭಾರತ ಕಮ್ಯುನಿಸ್ಟ್‌ ಪಕ್ಷ(ಸಿಪಿಐ) ಸಹ ಮುಂಚೂಣಿಯಲಿದೆ. ಆದರೆ, ಸೀಟು ಹಂಚಿಕೆಗೆ ಸಂಬಂಧಿಸಿ ಗೊಂದಲ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಚಂದ್ರಬಾಬು ನಾಯ್ಡು, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು. ಆದರೆ ಇದು ವಿಫಲವಾದ್ದರಿಂದ ಕಳೆದ ಮಾರ್ಚ್‌ ತಿಂಗಳಲ್ಲಿ ಎನ್‌ಡಿಎಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದರು.

ಇದೀಗ ರಾಷ್ಟ್ರದ ಎಲ್ಲ ಬಿಜೆಪಿ ವಿರೋಧಿ ಪಕ್ಷಗಳನ್ನು ಒಂದೇ ವೇದಿಕೆಗೆ ತರುವ ಪ್ರಯತ್ನಿಸುತ್ತಿರುವ ಅವರು, ದೆಹಲಿಯ ಆಮ್‌ ಆದ್ಮಿ ಪಾರ್ಟಿ(ಎಎಪಿ) ಪಕ್ಷದ ಮುಖ್ಯಸ್ಥ ಹಾಗೂ ಮುಖ್ಯಂಮಂತ್ರಿ ಅರವಿಂದ್‌ ಕೇಜ್ರಿವಾಲ್‌, ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ, ಅಖಿಲೇಶ್‌ ಯಾದವ್‌ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.