ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹಿಂಸಾಚಾರಗಳಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರೋತ್ಸಾಹ ನೀಡುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಸೋಮವಾರ ತಿರುಗೇಟು ನೀಡಿದ ಕಾಂಗ್ರೆಸ್, ‘ನಾಯಕರ ಭದ್ರತೆಯ ವಿಚಾರದಲ್ಲಿಯೂ ಕೀಳುಮಟ್ಟದ ರಾಜಕೀಯ ಮಾಡಬೇಡಿ’ ಎಂದು ಹೇಳಿದೆ.
‘ಬಲಪಂಥೀಯ ಭಯೋತ್ಪಾದಕರಿಂದಾಗಿ ಕಾಂಗ್ರೆಸ್ ಪಕ್ಷವು ಮಹಾತ್ಮ ಗಾಂಧೀಜಿಯನ್ನು ಕಳೆದುಕೊಳ್ಳಬೇಕಾಯಿತು. ಉಗ್ರರಿಂದಾಗಿ ನಾವು ಇಬ್ಬರು ಪ್ರಧಾನಿಗಳನ್ನು ಕಳೆದುಕೊಂಡೆವು. ಬಿಜೆಪಿ ಸರ್ಕಾರದ ಅಡಿಯಲ್ಲಿರುವ ಬಲಪಂಥೀಯ ಭಯೋತ್ಪಾದಕರಿಂದ ಛತ್ತೀಸಗಢದಲ್ಲಿ ನಮ್ಮ ನಾಯಕತ್ವ ಸಂಪೂರ್ಣವಾಗಿ ಕೈಬಿಟ್ಟುಹೋಯಿತು’ ಎಂದು ಕಾಂಗ್ರೆಸ್ನ ಮಾಧ್ಯಮ ಮತ್ತು ಪ್ರಚಾರ ಸಮಿತಿಯ ಮುಖ್ಯಸ್ಥ ಪವನ್ ಖೇರಾ ಟೀಕಿಸಿದರು.
‘ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಮತ್ತು ಇಡೀ ಪರಿವಾರದ ವಿರುದ್ಧ ಸುಳ್ಳು ವಿಚಾರಗಳನ್ನು ಹರಡುವ ಮೂಲಕ ಪ್ರಧಾನಿ ಮೋದಿ ಮತ್ತು ಬಿಜೆಪಿಯವರು ಜನರಲ್ಲಿ ಕಾಂಗ್ರೆಸ್ ವಿರೋಧಿ ಮನೋಭಾವನೆಯನ್ನು ಸೃಷ್ಟಿಸುತ್ತಿದ್ದಾರೆ. ಪ್ರಧಾನಿ ಮೋದಿಯವರೇ ತಮ್ಮ ಎಸ್ಪಿಜಿ ಭದ್ರತೆಯನ್ನು ಹಿಂಪಡೆದುಕೊಂಡಿದ್ದರು’ ಎಂದು ಹೇಳಿದರು.
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ದಾಳಿ ನಡೆದ ಬಳಿಕ, ಬಿಜೆಪಿಯು ಭಾನುವಾರ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.