ADVERTISEMENT

ಸಹಕಾರ ಸಚಿವಾಲಯ ರಚನೆ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಪಿಟಿಐ
Published 11 ಜುಲೈ 2021, 7:56 IST
Last Updated 11 ಜುಲೈ 2021, 7:56 IST
.
.   

ತಿರುವನಂತಪುರ: ಕೇಂದ್ರ ಸರ್ಕಾರವು ಹೊಸದಾಗಿ ಸಹಕಾರ ಸಚಿವಾಲಯ ರಚಿಸಿದ ಕ್ರಮವನ್ನು ಕಾಂಗ್ರೆಸ್‌ ಮುಖಂಡ ರಮೇಶ್‌ ಚೆನ್ನಿತ್ತಾಲ ಟೀಕಿಸಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮದ ವಿರುದ್ಧ ಜಾತ್ಯತೀತ ಪಕ್ಷಗಳು ಒಂದಾಗಿ ಹೋರಾಟ ನಡೆಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ಸಹಕಾರ ಕ್ಷೇತ್ರವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಬಿಜೆಪಿ ಮತ್ತು ಸಂಘ ಪರಿವಾರ ಮುಂದಾಗಿದೆ ಎಂದು ಅವರು ದೂರಿದ್ದಾರೆ.

ಸಹಕಾರ ಚಳವಳಿ ಪ್ರಬಲವಾಗಿರುವ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಸಹಕಾರಿ ಸಂಘಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿವೆ. ಇವುಗಳ ಮೇಲೆ ತನ್ನ ನಿಯಂತ್ರಣ ಸಾಧಿಸುವ ಉದ್ದೇಶದಿಂದ ಮೋದಿ ಸರ್ಕಾರ ಕೈಗೊಂಡಿರುವ ಈ ನಡೆ ಸಂವಿಧಾನಬಾಹಿರವಾಗಿದೆ. ಇದು ಕೋಮುವಾದಿ ಕ್ರಮವೂ ಆಗಿದೆ ಎಂದು ಅವರು ಟೀಕಿಸಿದ್ದಾರೆ.

ADVERTISEMENT

ಕೇಂದ್ರ ಸರ್ಕಾರದ ಈ ನಡೆಯನ್ನು ವಿರೋಧಿಸಿ ಎಲ್ಲ ವಿರೋಧ ಪಕ್ಷಗಳು ತುರ್ತಾಗಿ ರಾಷ್ಟ್ರಪತಿ ಅವರನ್ನು ಭೇಟಿಯಾಗಿ, ಮಧ್ಯಪ್ರವೇಶಿಸುವಂತೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.

ಸಂವಿಧಾನದ ರಾಜ್ಯ ಪಟ್ಟಿಯಲ್ಲಿ ಸಹಕಾರ ಸಂಘಗಳ ವಿಷಯ ಬರುವುದರಿಂದ ಈ ಕುರಿತು ಕಾನೂನು ಹೋರಾಟಕ್ಕೂ ಮುಂದಾಗಬೇಕು ಎಂದು ಅವರು ವಿರೋಧ ಪಕ್ಷಗಳಿಗೆ ಸಲಹೆ ನೀಡಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಸಹಕಾರಿ ಸಂಘಗಳ ವಿಷಯವು ರಾಜ್ಯಗಳ ಪಟ್ಟಿಗೆ ಬರುವುದರಿಂದ ಇವುಗಳ ಮೇಲೆ ರಾಜ್ಯಗಳಿಗೆ ಸಹಜವಾಗಿಯೇ ಕಾಳಜಿ ಇರುತ್ತದೆ. ಹೀಗಿರುವಾಗ ಕೇಂದ್ರ ಸರ್ಕಾರದ ನಡೆಯನ್ನು ಸೂಕ್ಷ್ಮವಾಗಿ ಗಮನಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಚೆನ್ನಿತ್ತಾಲ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕೆಲವು ಬಹುರಾಜ್ಯ ಸಹಕಾರ ಸಂಘಗಳೂ ಕಾರ್ಯ ನಿರ್ವಹಿಸುತ್ತಿವೆ. ಆದರೆ ಅವು ದೊಡ್ಡ ಪ್ರಮಾಣದಲ್ಲಿ ಇಲ್ಲ. ಅದಕ್ಕಾಗಿಯೇ ಪ್ರತ್ಯೇಕ ಸಚಿವಾಲಯ ಅಗತ್ಯವಿದೆಯೇ ಎಂದು ವಿಜಯನ್‌ ಪ್ರಶ್ನಿಸಿದ್ದರು.

ಕೇಂದ್ರ ಸರ್ಕಾರ ಹೊಸದಾಗಿ ರಚಿಸಿರುವ ಸಹಕಾರ ಇಲಾಖೆ ಸಚಿವರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಹಕಾರಿಗಳು ಮತ್ತು ಎಲ್ಲಾ ಸಹಕಾರಿ ಸಂಸ್ಥೆಗಳನ್ನು ಇನ್ನಷ್ಟು ಬಲಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.