ಭದ್ರತಾ ಪಡೆ
(ಪಿಟಿಐ ಚಿತ್ರ)
ನಾರಾಯಣಪುರ/ಹೈದರಾಬಾದ್: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಧಾನ ಕಾರ್ಯದರ್ಶಿ, ಪ್ರಮುಖ ನಕ್ಸಲ್ ನಾಯಕ ನಂಬಾಲಾ ಕೇಶವ್ ರಾವ್ ಅಲಿಯಾಸ್ ಬಸವರಾಜು (70) ಸೇರಿ 27 ನಕ್ಸಲರನ್ನು ಭದ್ರತಾ ಪಡೆಗಳು ಬುಧವಾರ ಹತ್ಯೆ ಮಾಡಿವೆ.
ಬಸವರಾಜು ಅವರ ಹತ್ಯೆಯು ಭದ್ರತಾ ಪಡೆಗಳಿಗೆ ದೊರಕಿದ ಬಹುದೊಡ್ಡ ಗೆಲುವು ಎನ್ನಲಾಗಿದೆ. ಬಸವರಾಜು ಹತ್ಯೆಯನ್ನು ಖಚಿತಪಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಇದೊಂದು ಐತಿಹಾಸಿಕ ಸಾಧನೆ’ ಎಂದು ಬಣ್ಣಿಸಿದ್ದಾರೆ. ಇನ್ನೊಂದೆಡೆ, ಬಸವರಾಜು ಅವರ ಹತ್ಯೆಯು ನಕ್ಸಲ್ ಚಳವಳಿಗೆ ಆದ ಬಹುದೊಡ್ಡ ಹಿನ್ನಡೆ ಎಂದೂ ವಿಶ್ಲೇಷಿಸಲಾಗುತ್ತಿದೆ.
ಛತ್ತೀಸಗಢದ ನಾರಾಯಣಪುರ–ಬಿಜಾಪುರ–ದಂತೆವಾಡಾ ಜಿಲ್ಲೆಗಳಲ್ಲಿ ಹಬ್ಬಿಕೊಂಡಿರುವ ಅಬೂಜಮಾಢ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದವು. ಜಿಲ್ಲಾ ಮೀಸಲು ಪಡೆಯ (ಡಿಆರ್ಜಿ) ಪೊಲೀಸರೊಬ್ಬರೂ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದು, ಹಲವು ಪೊಲೀಸರಿಗೆ ಗಾಯಗಳಾಗಿವೆ.
‘ಈ ಪ್ರದೇಶಗಳಲ್ಲಿ ಸಿಪಿಎಂ ಪಕ್ಷದ ಪಾಲಿಟ್ ಬ್ಯುರೊ ಮತ್ತು ಕೇಂದ್ರ ಸಮಿತಿಯ ಸದಸ್ಯರ ಜೊತೆಗೆ ‘ಪೀಪಲ್ಸ್ ಲಿಬರೇಷನ್ ಗೆರಿಲ್ಲಾ ಆರ್ಮಿ (ಪಿಎಲ್ಜಿಎ) ಸಂಘಟನೆ’ಯ ಮಾಡ್ ವಿಭಾಗದ ನಕ್ಸರು ಇರುವ ಬಗ್ಗೆ ಗುಪ್ತಚರವು ನೀಡಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು’ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದರು.
‘27 ನಕ್ಸಲರನ್ನು ಹತ್ಯೆ ಮಾಡಲಾಗಿದ್ದು, ಅವರ ಬಳಿ ಇದ್ದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದೂ ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.