ನವದೆಹಲಿ: ಚೀನಾದ 263 ಮಂದಿಗೆ ವೀಸಾ ಕೊಡಿಸಿದ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕಾರ್ತಿ ಅವರು 2011ರಲ್ಲಿ ತಮ್ಮ ತಂದೆ ಚಿದಂಬರಂ ಅವರು ಗೃಹ ಸಚಿವರಾಗಿದ್ದ ಅವಧಿಯಲ್ಲಿ ಚೀನಾದ 263 ಮಂದಿಗೆ ವೀಸಾ ಕೊಡಿಸಿದ್ದರು. ಇದರಲ್ಲಿ ಕಾರ್ತಿ ಮತ್ತು ಅವರ ಆಪ್ತ ಎಸ್.ಭಾಸ್ಕರ ರಾಮನ್ ವಿರುದ್ಧ ₹50 ಲಕ್ಷ ಲಂಚ ಪಡೆಯಲಾಗಿದೆ ಎಂಬ ಆರೋಪವಿದ್ದು, ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಸಿಬಿಐ ಎಫ್ಐಆರ್ ಆಧರಿಸಿ ಪಿಎಂಎಲ್ಎ ಅಡಿಯಲ್ಲಿ ಕಾರ್ತಿ ಮತ್ತು ಇತರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಹಗರಣ ಕುರಿತು ಇ.ಡಿ ತನಿಖೆ ನಡೆಸಲಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಕಾರ್ತಿ ಚಿದಂಬರಂ ಅವರು ‘ಇದು ಕಿರುಕುಳವಲ್ಲವೇ? ಇಲ್ಲದಿದ್ದರೆ ಮತ್ತೇನು?’ ಎಂದು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.