ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಜಾರಿ ನಿಶ್ಚಿತ: ಜೆ.ಪಿ.ನಡ್ಡಾ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 19:31 IST
Last Updated 19 ಡಿಸೆಂಬರ್ 2019, 19:31 IST
ಅಫ್ಗಾನಿಸ್ತಾನದ ನಿರಾಶ್ರಿತ ಮತ್ತು ಅಕ್ರಮ ವಲಸಿಗ ಸಿಖ್ ಸಮುದಾಯದ ಜನರು ಜೆ.ಪಿ. ನಡ್ಡಾ ಅವರನ್ನು ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿದರು
ಅಫ್ಗಾನಿಸ್ತಾನದ ನಿರಾಶ್ರಿತ ಮತ್ತು ಅಕ್ರಮ ವಲಸಿಗ ಸಿಖ್ ಸಮುದಾಯದ ಜನರು ಜೆ.ಪಿ. ನಡ್ಡಾ ಅವರನ್ನು ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿದರು   

ನವದೆಹಲಿ (ಪಿಟಿಐ):‘ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದೇ ತರುತ್ತೇವೆ. ಅದರ ಬೆನ್ನಲ್ಲೇ ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿಯೂ (ಎನ್‌ಆರ್‌ಸಿ) ನಡೆಯಲಿದೆ’ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ ಅವರು ಈ ಮಾತು ಹೇಳಿದ್ದಾರೆ.

‘ಈ ಕಾಯ್ದೆಯನ್ನು ವಿರೋಧಿಸುತ್ತಿರುವವರು, ಭಾರತದಲ್ಲಿ 28–30 ವರ್ಷಗಳಿಂದ ಇದ್ದೂ ಪೌರತ್ವ ಸಿಗದೇ ಇರುವ ಜನರನ್ನು ಭೇಟಿ ಮಾಡಬೇಕು. ಪೌರತ್ವ ಇಲ್ಲ ಎಂಬ ಒಂದೇ ಕಾರಣಕ್ಕೆ ಈ ಜನರು ಮನೆ ಖರೀದಿಸಲು ಆಗುತ್ತಿಲ್ಲ, ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಆಗುತ್ತಿಲ್ಲ. ತಮ್ಮ ಮತಬ್ಯಾಂಕ್‌ ಹೊರತುಪಡಿಸಿ ಬೇರೇನನ್ನೂ ನೋಡಲುವಿರೋಧ ಪಕ್ಷಗಳಿಗೆ ಸಾಧ್ಯವಿಲ್ಲ’ ಎಂದು ಅವರು ಟೀಕಿಸಿದ್ದಾರೆ.

ADVERTISEMENT

‘ಪೌರತ್ವ ಪಡೆಯಲು ಅರ್ಹರಾದವರಿಗೆ ಪೌರತ್ವ ನೀಡುವ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯಲಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಪ್ರಗತಿಯತ್ತ ದಾಪುಗಾಲು ಹಾಕುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದೇ ತರುತ್ತೇವೆ. ಎನ್‌ಆರ್‌ಸಿಯೂ ಜಾರಿಗೆ ಬರುತ್ತದೆ’ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ಮತ್ತು ಒಳನುಸುಳಿರುವ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರೈಸ್ತ ಧರ್ಮೀಯರಿಗೆ ಪೌರತ್ವ ನೀಡಲು ಈ ಕಾಯ್ದೆ ಅವಕಾಶ ಮಾಡಿಕೊಡುತ್ತದೆ. ಈ ಕಾಯ್ದೆಯಿಂದ ಮುಸ್ಲಿಮರನ್ನು ಹೊರಗಿಟ್ಟಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಧರ್ಮದ ಆಧಾರದಲ್ಲಿ ಪೌರತ್ವ ನೀಡುತ್ತಿರುವುದಕ್ಕೂ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.