ಸಿ.ಜೆ.ರಾಯ್
ತಿರುವನಂತಪುರ: ಕೇರಳದ ಉದ್ಯಮಿ, ರಿಯಲ್ ಎಸ್ಟೇಟ್ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ರಾಜ್ಯದ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಪ್ರತಿಕ್ರಿಯೆಗಳು ಎಲ್ಲರ ಹುಬ್ಬೇರುವಂತೆ ಮಾಡಿದೆ.
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ವಿರೋಧ ಪಕ್ಷಗಳಿಗೆ, ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ಗೆ ಹಣಕಾಸಿನ ನೆರವು ಒದಗಿಸುವ ಉದ್ಯಮಿಗಳ ಮೇಲೆ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಒತ್ತಡ ಹೇರುತ್ತಿದೆ ಎಂಬ ಸಂಕಥನವನ್ನು ಈ ಪ್ರಕರಣ ಹುಟ್ಟುಹಾಕಿದೆ.
ರಾಯ್ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಗೆ ಅವರಿಗೆ ಪತ್ರ ಬರೆದಿರುವುದು ಕೂಡಾ ಹಲವರಿಗೆ ಅಚ್ಚರಿ ಉಂಟುಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಎಂ ಮತ್ತು ಕಾಂಗ್ರೆಸ್, ರಾಯ್ ಅವರನ್ನು ಬೆಂಬಲಿಸಿ ಬಹಿರಂಗ ಹೇಳಿಕೆ ನೀಡಿಲ್ಲ. ಆದರೆ ‘ರಾಯ್ ಅವರು ಕೇಂದ್ರೀಯ ಸಂಸ್ಥೆಗಳ ಕಿರುಕುಳಕ್ಕೆ ಬಲಿಯಾಗಿದ್ದಾರೆ’ ಎಂದು ಅವರ ಕುಟುಂಬವು ಮಾಡಿರುವ ಆರೋಪವನ್ನು ಬೆಂಬಲಿಸುವಂತಹ ಹೇಳಿಕೆ ಕೊಟ್ಟಿವೆ.
ಸಿಪಿಎಂ ಮತ್ತು ಕಾಂಗ್ರೆಸ್ಗೆ ಚುನಾವಣೆ ಸಮಯದಲ್ಲಿ ದೇಣಿಗೆ ಒದಗಿಸುವ ಕೇರಳದ ಇತರ ಇಬ್ಬರು ಪ್ರಮುಖ ಬಿಲ್ಡರ್ಗಳು ಕೂಡ ಕೇಂದ್ರದ ತನಿಖಾ ಸಂಸ್ಥೆಗಳ ನಿಗಾದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಉದ್ಯಮಿಯ ಸಾವಿಗೆ ರಾಜಕೀಯ ಪಕ್ಷಗಳು ಆಘಾತ ವ್ಯಕ್ತಪಡಿಸಿರುವುದನ್ನು ನಾವು ನೋಡಿದ್ದೇವೆ. ಆದರೆ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ನಡೆದ ರಾಯ್ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಕೇರಳ ಮುಖ್ಯಮಂತ್ರಿಯು ಕೇಂದ್ರದ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿರುವುದು ಅಚ್ಚರಿ ಮೂಡಿಸಿದೆ’ ಎಂದು ರಾಜಕೀಯ ವಿಶ್ಲೇಷಕ ಜೋಸೆಫ್ ಮ್ಯಾಥ್ಯೂ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಅವರಿಗೆ ಐ.ಟಿ ಸಲಹೆಗಾರರಾಗಿ ಈ ಹಿಂದೆ ಕೆಲಸ ಆಡಿದ್ದ ಮ್ಯಾಥ್ಯೂ, ‘ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯು ಕೇರಳದಲ್ಲಿ ಸಿಪಿಎಂ ಮತ್ತು ಕಾಂಗ್ರೆಸ್ ಎರಡರೊಂದಿಗೂ ನಿಕಟ ಸಂಪರ್ಕ ಹೊಂದಿದೆ’ ಎಂದಿದ್ದಾರೆ. ಕೇರಳದಲ್ಲಿ ಕ್ರೈಸ್ತ ಕುಟುಂಬಗಳು ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಪರವಾಗಿವೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ.
‘ಕಾನ್ಫಿಡೆಂಟ್ ಗ್ರೂಪ್ ಮಾತ್ರವಲ್ಲ, ವಿವಿಧ ಉದ್ಯಮಗಳನ್ನು ನಡೆಸುವ ಇತರ ಪ್ರಮುಖ ಕ್ರೈಸ್ತ ಕುಟುಂಬಗಳನ್ನು ಸಾಮಾನ್ಯವಾಗಿ ಕಾಂಗ್ರೆಸ್ ಬೆಂಬಲಿಗರು ಮತ್ತು ಆ ಪಕ್ಷಕ್ಕೆ ದೇಣಿಗೆ ನೀಡುವವರು ಎಂದು ಪರಿಗಣಿಸಲಾಗುತ್ತದೆ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.