ADVERTISEMENT

ಮುಖ್ಯಮಂತ್ರಿ ಸಚಿವಾಲಯದ ಆಯಕಟ್ಟಿನ ಹುದ್ದೆಗಳಲ್ಲಿದ್ದ ಬಿಎಸ್‌ವೈ ಆಪ್ತರು ಹೊರಕ್ಕೆ!

ಬಿ.ವೈ. ವಿಜಯೇಂದ್ರ ಅವರ ಆಪ್ತರೂ ಕರ್ತವ್ಯದಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 2:04 IST
Last Updated 2 ಆಗಸ್ಟ್ 2021, 2:04 IST
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ    

ಬೆಂಗಳೂರು: ಯಡಿಯೂರಪ್ಪ ಅವರ ಅವಧಿಯಲ್ಲಿ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ಆಯಕಟ್ಟಿನ ಹುದ್ದೆಗಳಲ್ಲಿದ್ದ 19 ಮಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಶನಿವಾರ ಆದೇಶ ಹೊರಡಿಸಲಾಗಿದೆ.

ತಮ್ಮೊಂದಿಗೆ ಅತ್ಯಂತ ನಿಕಟ ವಾಗಿದ್ದ ಹಲವರನ್ನು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಚಿವಾಲಯಕ್ಕೆ ನೇಮಿಸಿಕೊಂಡಿದ್ದರು. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಅವರ ಆಪ್ತರೂ ಹಲವು ಮಂದಿ ಸಚಿವಾಲಯದಲ್ಲಿದ್ದರು. ಬಹುತೇಕ ಎಲ್ಲರನ್ನೂ ಸಚಿವಾಲಯದಿಂದ ಹೊರ ಕಳುಹಿಸುವ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿದ್ದ ಐಎಎಸ್‌ ಅಧಿಕಾರಿ ಡಾ.ಎಸ್‌. ಸೆಲ್ವಕುಮಾರ್‌ ಅವರನ್ನು ಕೌಶಲ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ADVERTISEMENT

ಕರ್ನಾಟಕ ವಿದ್ಯುತ್‌ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯಲ್ಲಿದ್ದ ಐಎಎಸ್‌ ಅಧಿಕಾರಿ ವಿ. ಪೊನ್ನುರಾಜ್‌ ಅವರನ್ನು ಮುಖ್ಯಮಂತ್ರಿಯವರ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಪೊನ್ನುರಾಜ್‌ ಅವರಿಗೆ ವಿದ್ಯುತ್‌ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯನ್ನೂ ಹೆಚ್ಚುವರಿಯಾಗಿ ನೀಡಲಾಗಿದೆ.

ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಯವರ ಸಲಹೆಗಾರರಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಎಂ. ಲಕ್ಷ್ಮೀನಾರಾಯಣ ಅವರನ್ನು ಬಿಡುಗಡೆ ಮಾಡಲಾಗಿದೆ. ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಡಾ.ಎ. ಲೋಕೇಶ್‌, ವಿಶೇಷಾಧಿಕಾರಿಗಳಾಗಿದ್ದ ಎಚ್‌.ಎಸ್‌. ಸತೀಶ್, ಟಿ.ಎಂ. ಸುರೇಶ್, ಉಪ ಕಾರ್ಯದರ್ಶಿಯಾಗಿದ್ದ ಎ.ಆರ್‌. ರವಿ ಸೇರಿದಂತೆ ಹಲವು ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಿದ್ದು, ಮೂಲ ಸ್ಥಾನಕ್ಕೆ ವರದಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಮುಖ್ಯಮಂತ್ರಿಯವರ ಮಾಧ್ಯಮ ಸಮನ್ವಯ ಅಧಿಕಾರಿಗಳಾಗಿದ್ದ ಎಸ್‌. ಶಾಂತಾರಾಂ, ಜಿ.ಎಸ್‌. ಸುನೀಲ್‌, ಸಾಂಸ್ಕೃತಿಕ ಸಮನ್ವಯ ಅಧಿಕಾರಿಯಾಗಿದ್ದ ಗಣೇಶ್‌ ಯಾಜಿ ಅವರನ್ನೂ ಹುದ್ದೆಯಿಂದ ಕೈಬಿಡಲಾಗಿದೆ.ಯಡಿಯೂರಪ್ಪ ಅವಧಿಯಲ್ಲಿದ್ದವರಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಸೇರಿದಂತೆ ಕೆಲವು ಅಧಿಕಾರಿಗಳನ್ನು ಮಾತ್ರ ಮುಂದುವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.