ADVERTISEMENT

ಕೇರಳ: ಎಲ್‌ಡಿಎಫ್‌ ಸರ್ಕಾರದ ವಿರುದ್ಧ ಸಿ.ಎನ್.‌ಅಶ್ವತ್ಥನಾರಾಯಣ ವಾಗ್ದಾಳಿ

‘ಹೂಡಿಕೆ ಇಲ್ಲ, ಉದ್ಯೋಗ ಸೃಷ್ಟಿ ಆಗಿಲ್ಲ, ಸ್ವಜನ ಪಕ್ಷಪಾತವೇ ಎಲ್ಲ’

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2021, 10:33 IST
Last Updated 19 ಮಾರ್ಚ್ 2021, 10:33 IST
ಸುದ್ದಿಗೋಷ್ಠಿಯಲ್ಲಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಮಾತನಾಡಿದರು.   

ತಿರುವನಂತಪುರ: ಕೇರಳದ ಎಲ್‌ಡಿಎಫ್‌ ಸರಕಾರ ಎಲ್ಲ ಕ್ಷೇತ್ರಗಳ್ಲಲೂ ವಿಫಲವಾಗಿದೆ. ದುರಾಡಳಿತ ಮತ್ತು ಸ್ವಜನ ಪಕ್ಷಪಾತದಿಂದ ರಾಜ್ಯವು ಇತರೆ ಎಲ್ಲ ರಾಜ್ಯಗಳಿಗಿಂತ ಹಿಂದೆ ಬಿದ್ದಿದೆ ಎಂದು ಕೇರಳದ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಗಂಭೀರ ಆರೋಪ ಮಾಡಿದರು.

ತಿರುವನಂತಪುರದಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಚಾರದ ವಿಡಿಯೊ ತುಣುಕುಗಳನ್ನು ಬಿಡುಗಡೆ ಮಾಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು‌ ಮಾತನಾಡಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಎಲ್‌ಡಿಎಫ್‌ ಸರಕಾರದ ವಿರುದ್ಧ ಅವರು ಟೀಕಾಪ್ರಹಾರ ನಡೆಸಿದರು.

ಉದ್ಯೋಗ ಸೃಷ್ಟಿ ಆಗಿಲ್ಲ: ಎಲ್‌ಡಿಎಫ್‌ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿ ವೈಫಲ್ಯತೆ ಹೊಂದಿದೆ ಮಾತ್ರವಲ್ಲ, ರಾಜ್ಯದಲ್ಲಿ ಹೂಡಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವಲ್ಲಿ ಸಂಪೂರ್ಣ ಸೋತಿದೆ. ಉದ್ಯೋಗ ಸೃಷ್ಟಿಯಲ್ಲಿ ಘೋರವಾಗಿ ವಿಫಲವಾಗಿದೆ. ಹೀಗಾಗಿ ಕೇರಳದ ವಿದ್ಯಾವಂತ ಯುವ ಜನರು ಕೆಲಸಕ್ಕಾಗಿ ಬೇರೆ ಬೇರೆ ಕಡೆ ಹೋಗಬೇಕಾದ ಪರಿಸ್ಥಿತಿಯನ್ನು ಸೃಷ್ಟಿಸಲಾಗಿದೆ ಎಂದು ಡಿಸಿಎಂ ದೂರಿದರು.

ADVERTISEMENT

ಇಡೀ ದೇಶವೇ ಮುಮ್ಮುಖವಾಗಿ ಚಲಿಸುತ್ತ ಕೈಗಾರಿಕೆ, ಉದ್ಯೋಗ, ಕೃಷಿ ಮುಂತಾದ ಕ್ಷೇತ್ರಗಳಲ್ಲಿ ಅಗಾಧ ಸುಧಾರಣೆಗಳನ್ನು ತಂದು ಜನರಿಗೆ ಒಳ್ಳೆಯದು ಮಾಡುತ್ತಿದ್ದರೆ, ಕೇರಳ ಹಿಮ್ಮುಖವಾಗಿ ಚಲಿಸುತ್ತಿದೆ. ಅಂದರೆ; ಅಭಿವೃದ್ಧಿಗೆ ವಿರುದ್ಧವಾಗಿ ಚಲಿಸುತ್ತಿದೆ. ಕೃಷಿಯಲ್ಲಿ ಸ್ವಾವಲಂಭಿಯಗಿದ್ದ ರಾಜ್ಯವನ್ನು ಹಾಳುಗೆಡವಿದೆ. ಎಲ್‌ಡಿಎಫ್‌ ಸರಕಾರವು ಜನರ ಆಶೋತ್ತರಗಳನ್ನು ಗಾಳಿಗೆ ತೂರಿ ಸವಕಲು, ಅಪ್ರಸ್ತುತ ವಿಚಾರಗಳ ಮೂಲಕ ರಾಜ್ಯವನ್ನು ಕತ್ತಲೆಯಲ್ಲಿಟ್ಟಿದೆ ಎಂದು ಡಾ.ಅಶ್ವತ್ಥನಾರಾಯಣ ಆರೋಪಿಸಿದರು.

ಸ್ವಜನ ಪಕ್ಷಪಾತದ ವಿಜೃಂಭಣೆ: ಕೇರಳ ಸರ್ಕಾರ ಹಾಗೂ ಆಡಳಿತಾರೂಢ ಪಕ್ಷಗಳು ಸಂಪೂರ್ಣವಾಗಿ ಸ್ವಜನ ಪಕ್ಷಪಾತದಲ್ಲಿ ಮುಳುಗಿವೆ. ನಾವು-ನಮಗೆ ಬೇಕಾದವರು ಎಂಬ ನೀತಿಯಡಿಯಲ್ಲಿ ಸರಕಾರ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

‘ಸರ್ಕಾರದ ಎಲ್ಲ ಹಂತಗಳಲ್ಲೂ ಸ್ವಜನ ಪಕ್ಷಪಾತ ವಿಜೃಂಭಿಸುತ್ತಿದೆ. ಆಡಳಿತದ ಎಲ್ಲ ಮಟ್ಟದಲ್ಲಿ, ಸರಕಾರಿ ಸಂಸ್ಥೆಗಳಲ್ಲಿ ಸರ್ಕಾರ ತನ್ನ ಪಕ್ಷದ ಕಾರ್ಯಕರ್ತರು, ನಾಯಕರನ್ನು ತುಂಬಿದೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ದೂರಿದರು.

ಜನತೆಯಿಂದ ಅಧಿಕಾರಕ್ಕೆ ಬಂದಿರುವ ಸರಕಾರವು ಜನಾದೇಶವನ್ನು ಮರೆತು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವುದು ಅತ್ಯಂತ ಬೇಸರದ ಸಂಗತಿ. ಜನರಿಗೆ ಹೇಳಿದ್ದು ಒಂದು, ಮಾಡಿದ್ದು ಇನ್ನೊಂದು. ಎಲ್ಲ ರೀತಿಯಲ್ಲೂ ಎಲ್‌ಡಿಎಫ್‌ ಸರಕಾರವ ಜನರಿಗೆ ವಿರುದ್ಧವಾಗಿ ಕೆಲಸ ಮಾಡಿದೆ. ಜನರಿಗೆ ಉದ್ಯೋಗ ನೀಡಬೇಕಿದ್ದ ಸರಕಾರ ತನ್ನ ಕಾರ್ಯಕರ್ತರಿಗೆ ಕೆಲಸ ಕೊಟ್ಟಿದೆ ಎಂದು ಡಾ.ಅಶ್ವತ್ಥನಾರಾಯಣ ಟೀಕಿಸಿದರು.

ಸ್ವಜನ ಪಕ್ಷಪಾತ ಅದೆಷ್ಟರ ಮಟ್ಟಿಗೆ ಇದೆ ಎಂದರೆ, ‘ಕೇರಳ ಪಬ್ಲಿಕ್‌ ಸರ್ವೀಸ್‌ ಕಮೀಷನ್‌ʼ ಈಗ ‘ಪಾರ್ಟಿ ಸರ್ವೀಸ್‌ ಕಮೀಷನ್‌ʼ ಆಗಿಬಿಟ್ಟಿದೆ. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಬೇಕಾದರವರನ್ನು ಸರಕಾರಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಎಂದ ಅವರು; ಇದರಂದ ಅರ್ಹರಿಗೆ ಅನ್ಯಾಯವಾಗಿದೆ ಎಂದರು.

ಇಷ್ಟೆಲ್ಲ ವೈಫಲ್ಯಗಳನ್ನು ಕಂಡಿರುವ ಎಲ್‌ಡಿಎಫ್‌ ಸರಕಾರವನ್ನು ತೊಲಗಿಸಬೇಕಾಗಿದೆ. ಅಭಿವೃದ್ಧಿಗೆ ಮಾರಕವಾಗಿರುವ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಕೂಟವನ್ನು ಸೋಲಿಸಬೇಕಾಗಿದೆ ಎಂದು ಇದೇ ಸಂದರ್ಭದಲ್ಲಿ ಡಾ.ಅಶ್ವತ್ಥನಾರಾಯಣ ಹೇಳಿದರು.
ಚುನಾವಣಾ ನಿರ್ವಹಣಾ ಸಮಿತಿಯ ಮುಖ್ಯಸ್ಥರಾದ ಜಾರ್ಜ್ ಕುರಿಯನ್ ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.