ವೀಣಾ ಜಾರ್ಜ್ (ಸಂಗ್ರಹ ಚಿತ್ರ)
ತಿರುವನಂತಪುರ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾದ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
‘ಕೋಲ್ಡ್ರಿಫ್ ಸಿರಪ್ನ ಒಂದು ಬ್ಯಾಚ್ನಲ್ಲಿ ದೋಷ ಕಂಡುಬಂದಿರುವ ಬಗ್ಗೆ ಇತರ ರಾಜ್ಯಗಳ ವರದಿಗಳನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯ ಔಷಧ ನಿಯಂತ್ರಣ ಇಲಾಖೆಯ ವಿಚಾರಣೆ ವೇಳೆ ರಾಜ್ಯದಲ್ಲಿ ನಿರ್ದಿಷ್ಟ ಬ್ಯಾಚ್ನ ಔಷಧ ಮಾರಾಟವಾಗಿಲ್ಲ’ ಎಂದು ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
‘ಆದಾಗ್ಯೂ, ಸುರಕ್ಷತೆಯ ದೃಷ್ಟಿಯಿಂದ ‘ಕೋಲ್ಡ್ರಿಫ್’ ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ವಿತರಕರು ಮತ್ತು ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಜತೆಗೆ, ತಪಾಸಣೆ ವೇಳೆ ಸಿಕ್ಕಿರುವ ಕೋಲ್ಡ್ರಿಫ್ ಸಿರಪ್ನ ಮಾದರಿಗಳನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.
‘ಕೆಮ್ಮು ಮತ್ತು ಶೀತಕ್ಕೆ ಸಂಬಂಧಿಸಿದಂತೆ ಎರಡು ವರ್ಷದೊಳಗಿನ ಮಕ್ಕಳಿಗೆ ಔಷಧ ಶಿಫಾರಸು ಮಾಡಬಾರದು. ಐದು ವರ್ಷದೊಳಗಿನ ಮಕ್ಕಳಿಗೂ ಸಾಮಾನ್ಯವಾಗಿ ಅಗತ್ಯ ಇರುವುದಿಲ್ಲ. ಅತಿ ಅಗತ್ಯವಾದರೆ ಮಾತ್ರ ಸೂಕ್ತ ಪ್ರಮಾಣದಲ್ಲಿ ಕಡಿಮೆ ಅವಧಿಗೆ ಒದಗಿಸಬೇಕು’ ಎಂಬ ಕೇಂದ್ರ ಔಷಧ ನಿಯಂತ್ರಣ ಗುಣಮಟ್ಟ ಸಂಸ್ಥೆಯ (ಸಿಡಿಎಸ್ಸಿಒ) ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸುವಂತೆ ನಿರ್ದೇಶನ ನೀಡಲಾಗಿದೆ’ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.