ಚಂಡೀಗಢ: ತಮ್ಮ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆಯಬೇಕೆಂದು ಜನಸಾಮಾನ್ಯರು ಬಯಸುತ್ತಾರೆ. ದೇಶದ ಬಡತನ ನಿರ್ಮೂಲನೆ ಮಾಡಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾನುವಾರ ಹೇಳಿದರು.
ಲೂಧಿಯಾನದ ಇಂದ್ರಪುರಿ ಸೇರಿದಂತೆ ರಾಜ್ಯದಲ್ಲಿ 13 'ಸ್ಕೂಲ್ ಆಫ್ ಎಮಿನೆನ್ಸ್' ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಹ ಉಪಸ್ಥಿತರಿದ್ದರು.
ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಕೇಜ್ರಿವಾಲ್ ಗುಣಗಾನ ಮಾಡಿದರು. ಇದೊಂದು ಸರ್ಕಾರಿ ಶಾಲೆ ಎಂದು ಯಾರಿಗೂ ನಂಬಲು ಸಾಧ್ಯವಿಲ್ಲ. ಖಾಸಗಿ ವಲಯದಲ್ಲಿ ಯಾರಾದರೂ ಇಂತಹ ಶಾಲೆಗಳನ್ನು ಕಟ್ಟಿದರೆ, ತಿಂಗಳಿಗೆ ಕನಿಷ್ಠ 10 ಸಾವಿರ ರೂಪಾಯಿ ಶುಲ್ಕ ವಿಧಿಸುತ್ತಿದ್ದರು ಎಂದು ಅವರು ಹೇಳಿದರು.
ಸ್ಕೂಲ್ ಆಫ್ ಎಮಿನೆನ್ಸ್ನಲ್ಲಿ ಈಗ ಬಡವರ, ಕಾರ್ಮಿಕರ, ರೈತರ, ಮತ್ತಿತರ ಮಕ್ಕಳಿಗೂ ಆಧುನಿಕ ಸೌಲಭ್ಯಗಳು ದೊರೆಯಲಿವೆ ಎಂದು ಅವರು ಹೇಳಿದರು.
ಹಿಂದಿನ ಪಂಜಾಬ್ ಸರ್ಕಾರಗಳು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಿತ್ತು ಎಂದು ಅವರು ಆರೋಪಿಸಿದರು.
ನಾನು ಹಾಗೂ ಭಗವಂತ ಮಾನ್ ನಿರಂತರವಾಗಿ ಪಂಜಾಬ್ ಶಾಲೆಗಳಿಗೆ ಭೇಟಿ ಕೊಡುತ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿಗಳು ಶಾಲೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆಯೇ? ಈಗ ಇಬ್ಬರು ಮುಖ್ಯಮಂತ್ರಿಗಳು ಶಾಲೆ ಹಾಗೂ ಆಸ್ಪತ್ರೆಗಳಿಗೆ ಭೇಟಿ ಕೊಟ್ಟು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು.
ಜನಸಾಮಾನ್ಯರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಬಯಸುತ್ತಾರೆ. ಉತ್ತಮ ಶಿಕ್ಷಣ ನೀಡುವ ಮೂಲಕ ಮಾತ್ರ ಬಡತನ ನಿರ್ಮೂಲನೆ ಮಾಡಲು ಸಾಧ್ಯ. ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿದರೆ ಅವರು ಮುಂದೆ ಸಮರ್ಥ ಪ್ರಜೆಗಳಾಗಿ ದೇಶವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸಬಹುದು ಎಂದು ಅವರು ಪ್ರತಿಪಾದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.