ಅಹಮದಾಬಾದ್: ಗುಜರಾತ್ನ ಹಿಮ್ಮತ್ನಗರ ಮತ್ತು ಖಂಭಾತ್ ನಗರಗಳಲ್ಲಿ ನಡೆದ ರಾಮನವಮಿ ಮೆರವಣಿಗೆಯಲ್ಲಿ ಭಾನುವಾರ ಎರಡು ಕೋಮುಗಳ ನಡುವೆ ಘರ್ಷಣೆ ಸಂಭವಿಸಿದೆ. ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಎರಡೂ ಸ್ಥಳಗಳಲ್ಲಿ ಅಂಗಡಿಗಳು ಮತ್ತು ವಾಹನಗಳಿಗೆ ಹಾನಿಯಾಗಿದೆ.
ಘಟನೆಯಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದು ಇದುವರೆಗೆ ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಮ್ಮತ್ನಗರ ನಗರದ ಛಪಾರಿಯಾ ಪ್ರದೇಶಕ್ಕೆ ಮಧ್ಯಾಹ್ನ ರಾಮನವಮಿ ಮೆರವಣಿಗೆ ತಲುಪಿದಾಗ ಎರಡು ಸಮುದಾಯಗಳ ನಡುವೆ ಘರ್ಷಣೆ ಪ್ರಾರಂಭವಾಯಿತು. ಈ ವೇಳೆ ಎರಡೂ ಕಡೆಯ ಸದಸ್ಯರು ಪರಸ್ಪರ ಕಲ್ಲು ತೂರಾಟ ನಡೆಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಆಗಲೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಗರದ ಹೊರಗಿನಿಂದ ಹೆಚ್ಚುವರಿ ಪೊಲೀಸ್ ಪಡೆಯನ್ನು ಕರೆಸಲಾಯಿತು' ಎಂದು ಅಧಿಕಾರಿ ತಿಳಿಸಿದ್ದಾರೆ.
ಆನಂದ್ ಜಿಲ್ಲೆಯ ಖಂಭಾತ್ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ ನಡೆದಿದ್ದು, ಎರಡು ಗುಂಪುಗಳಿಂದ ಕಲ್ಲು ತೂರಾಟ ನಡೆದಿದೆ. ಈ ವೇಳೆ ಅಂಗಡಿಗಳು ಮತ್ತು ವಾಹನಗಳಿಗೆ ಹಾನಿಯಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಅಶ್ರುವಾಯು ಪ್ರಯೋಗಿಸಲಾಗಿದೆ ಎಂದು ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶ್ರೀರಾಮನ ಜನ್ಮದಿನವಾದ ರಾಮನವಮಿಯ ಅಂಗವಾಗಿ ಎರಡೂ ಕಡೆಗಳಲ್ಲಿ ಮೆರವಣಿಗೆಗಳನ್ನು ನಡೆಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.