ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ಹರಡುವಿಕೆಯಲ್ಲಿ ಸ್ಥಿರತೆ ಕಂಡುಬಂದಿದೆ.ಮೂರು ವಾರಗಳಿಂದ ಪ್ರತಿದಿನ ಪತ್ತೆಯಾಗುತ್ತಿರುವ ಹೊಸ ಪ್ರಕರಣಗಳು ಮತ್ತು ಕೋವಿಡ್ ಸಾವಿನ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಚಳಿಗಾಲದಲ್ಲಿ ಕೋವಿಡ್ ಹರಡುವಿಕೆಯು ಹೆಚ್ಚುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಅವರು ಹೇಳಿದ್ದಾರೆ.
ಕೋವಿಡ್-19 ಲಸಿಕೆಯ ರಾಷ್ಟ್ರೀಯ ತಜ್ಞರ ಗುಂಪಿನ ಅಧ್ಯಕ್ಷರಾಗಿರುವ ಪಾಲ್ ಅವರು, ‘ಭಾರತದ ಸ್ಥಿತಿ ಉತ್ತಮವಾಗಿದೆ. ಕೇರಳ, ಕರ್ನಾಟಕ, ರಾಜಸ್ಥಾನ, ಛತ್ತೀಸಗಡ ಮತ್ತು ಪಶ್ಚಿಮ ಬಂಗಾಳ ಹಾಗೂ 3-4 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾತ್ರ ಕೋವಿಡ್ ಸೋಂಕು ಹರಡುವಿಕೆ ಏರಿಕೆಯಲ್ಲಿದೆ. ಆದರೆ, ದೇಶದ ಶೇ 90ರಷ್ಟು ಜನರು ಸೋಂಕಿನ ಸಂಪರ್ಕಕ್ಕೆ ಬರುವ ಸಾಧ್ಯತೆ ಇರುವುದರಿಂದ ಮಾಡಬೇಕಾದ ಕೆಲಸಗಳು ಸಾಕಷ್ಟು ಇವೆ’ ಎಂದು ಎಚ್ಚರಿಕೆ ನೀಡಿದ್ದಾರೆ.
‘ಕೊರೊನಾ ವೈರಸ್ನ ಬಗ್ಗೆ ಇನ್ನೂ ತಿಳಿದುಕೊಳ್ಳಬೇಕಾದದ್ದು ಇದೆ. ಚಳಿಗಾಲದಲ್ಲಿ ಈ ವೈರಾಣು ಹೇಗೆ ವರ್ತಿಸುತ್ತದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಚಳಿಗಾಲದಲ್ಲಿ ಸೋಂಕು ಹರಡುವಿಕೆಯ ಹೆಚ್ಚಬಹುದು ಎಂಬುದನ್ನು ತಳ್ಳಿಹಾಕಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.
‘ಚಳಿಗಾಲದಲ್ಲಿ ಉತ್ತರ ಭಾರತದ ಹಲವೆಡೆ ವಾಯುಮಾಲಿನ್ಯ ಹೆಚ್ಚಾಗುತ್ತದೆ. ಜತೆಗೆ ಹಬ್ಬದ ಋತುವೂ ಆರಂಭವಾಗುತ್ತದೆ. ಹೀಗಾಗಿ ನಾವು ಬಹಳ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಕೋವಿಡ್ ನಿಯಂತ್ರಣದಲ್ಲಿ ಮುಂದಿನ ತಿಂಗಳುಗಳು ಅತ್ಯಂತ ಮುಖ್ಯ. ಕೋವಿಡ್ ನಿಯಂತ್ರಣ ಕಾರ್ಯಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ ಇದ್ದರೆ, ಇಷ್ಟು ದಿನದ ಶ್ರಮ ವ್ಯರ್ಥವಾಗುವ ಅಪಾಯವಿದೆ’ ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.