ನವದೆಹಲಿ: ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ವಿರುದ್ಧದ ‘ಉದ್ಯೋಗಕ್ಕಾಗಿ ಹಣ’ ಹಗರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆ ತೆಗೆದುಕೊಂಡಿದೆ.
ಪ್ರಕರಣದಲ್ಲಿ 2000 ಮಂದಿಯನ್ನು ಆರೋಪಿಗಳನ್ನಾಗಿ ಮಾಡುವ ಮೂಲಕ ತಮಿಳುನಾಡು ಸರ್ಕಾರವು ನ್ಯಾಯಾಂಗ ವ್ಯವಸ್ಥೆಗೆ ವಂಚನೆ ಎಸಗಿದೆ ಎಂದು ನ್ಯಾಯಾಲಯ ಚಾಟಿ ಬೀಸಿದೆ.
ಸೆಂಥಿಲ್ ಬಾಲಾಜಿ ಅವರು ಸಾರಿಗೆ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ 2 ಪ್ರಕರಣಗಳು ದಾಖಲಾಗಿವೆ. ವಂಚನೆಗೀಡಾದ 2000 ಜನರನ್ನೂ ಲಂಚ ನೀಡಿದ್ದಾರೆ ಎಂಬ ಕಾರಣಕ್ಕೆ ಈ ಪ್ರಕರಣಗಳಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ.
ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸರ್ಕಾರವನ್ನು ತರಾಟೆ ತೆಗೆದುಕೊಂಡು, ‘ವಿಚಾರಣೆ ಅಂತ್ಯವೇ ಆಗದಂತೆ ಮಾಡಲು ಈ ರೀತಿ 2000 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದ್ದೀರಾ’ ಎಂದು ಪ್ರಶ್ನಿಸಿದೆ.
ಜತೆಗೆ ಬಾಲಾಜಿ ಅವರನ್ನು ಕುರಿತ ಎಲ್ಲಾ ಬಾಕಿ ಅರ್ಜಿಗಳ ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.