ಜಮ್ಮು (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಕ್ಷೇತ್ರ ವಿಂಗಡಣೆ ಮಾಡುವ ಪ್ರಸ್ತಾಪವನ್ನು ಕಾಂಗ್ರೆಸ್ ಬೆಂಬಲಿಸಿದ್ದು ಆದಷ್ಟು ಬೇಗ ಈ ಕಾರ್ಯವನ್ನು ಮುಗಿಸಬೇಕು ಎಂದು ಒತ್ತಾಯಿಸಿದೆ.
ಕ್ಷೇತ್ರ ಮರುವಿಂಗಡಣೆ ಮಾಡಲು ಮತ್ತು ಪರಿಶಿಷ್ಟ ಜಾತಿಯವರಿಗೆ ಮೀಸಲಾದ ಕ್ಷೇತ್ರಗಳನ್ನು ಗುರುತಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂಬ ವರದಿಗಳ ಆಧಾರದಲ್ಲಿ ಕಾಂಗ್ರೆಸ್ ಈ ಒತ್ತಾಯ ಮಾಡಿದೆ.
‘ವಿಧಾನಸಭಾ ಚುನಾವಣೆಗೂ ಮುನ್ನ ಈ ಕೆಲಸವನ್ನು ಮಾಡಿ ಮುಗಿಸಬೇಕು ಎಂದು ಕಾಂಗ್ರೆಸ್ ಬಯಸುತ್ತದೆ. ಜನಸಂಖ್ಯೆ, ಪ್ರದೇಶ ಮುಂತಾದ ಅಂಶಗಳನ್ನು ಗಣನೆಗೆ ತೆಗೆದುಕೊಂಡು, ಸಂವಿಧಾನ ಹಾಗೂ ಕಾನೂನಿಗೆ ಅನುಗುಣವಾಗಿ ಈ ಕೆಲಸವನ್ನು ಮಾಡಬೇಕು’ ಎಂದು ಜಮ್ಮು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ರವೀಂದ್ರ ಶರ್ಮಾ ಹೇಳಿದ್ದಾರೆ.
‘ಬಿಜೆಪಿ ಸರ್ಕಾರಕ್ಕೆ ಬಹುಮತ ಇರುವುದಲ್ಲದೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಇರುವುದರಿಂದ ಈ ಕೆಲಸವನ್ನು ಬೇಗ ಮುಗಿಸಬಹುದು’ ಎಂದೂ ಶರ್ಮಾ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.