ನವದೆಹಲಿ: ‘ವಯನಾಡು ಭೂಕುಸಿತದ ಪ್ರಮಾಣವನ್ನು ನೇರವಾಗಿ ನೋಡಿದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ವಿಶ್ವಾಸವಿದೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.
ಪ್ರಧಾನಿ ಅವರ ವಯನಾಡ್ ಭೇಟಿ ಕುರಿತಂತೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್ಗೆ ಭೇಟಿ ನೀಡುತ್ತಿರುವುದಕ್ಕೆ ಧನ್ಯವಾದಗಳು. ಇದೊಂದು ಉತ್ತಮ ನಿರ್ಧಾರ’ ಎಂದಿದ್ದಾರೆ.
‘ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ ನೀವು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತೀರಿ ಎಂಬ ವಿಶ್ವಾಸ ನನಗಿದೆ’ ಎಂದು ಹೇಳಿದರು.
ಇಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದಿಳಿಯುವ ಮೋದಿ ಅವರು ಅಲ್ಲಿಂದ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 12:15ರ ಸುಮಾರಿಗೆ ಭೂಕುಸಿತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ರಕ್ಷಣಾ ಪಡೆಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಯನಾಡ್ ಭೂಕುಸಿತ ದುರಂತದಲ್ಲಿ 266ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.