ನವಸಾರಿ: ಕಾಂಗ್ರೆಸ್ನಿಂದ ದೇಶ ಒಡೆಯಲು ಮಾತ್ರ ಸಾಧ್ಯ, ಒಂದುಗೂಡಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶುಕ್ರವಾರ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಭಾರತ್ ಜೋಡೊ ಯಾತ್ರೆ ವಿರುದ್ಧ ವಾಗ್ದಾಳಿ ನಡೆಸಿದಅವರು, ವೀರ ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿದರು.
ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನವಸಾರಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ರಾಕೇಶ್ ದೇಸಾಯಿ ಪರ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿದ ನಡ್ಡಾ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಭಾರತ್ ಜೋಡೊ ಯಾತ್ರೆ ಅಥವಾ ಭಾರತ್ ತೋಡೊ (ಭಾರತ ಒಡೆಯುವ) ಯಾತ್ರೆ ಕೈಗೊಂಡಿದೆಯೇ ಎಂಬದು ಅಚ್ಚರಿಗೆ ಕಾರಣವಾಗಿದೆ. ಭಾರತವನ್ನು ಒಂದುಗೂಡಿಸುವ ಯಾತ್ರೆ ಎಂದು ಕೈ ನಾಯಕರು ಹೇಳುತ್ತಾರೆ. ಆದರೆ ನಿಜ ಜೀವನದಲ್ಲಿ ಏನು ಮಾಡುತ್ತಿದ್ದಾರೆ? ರಾಹುಲ್ ಗಾಂಧಿ ಅವರು ದೆಹಲಿಯ ಜೆಎನ್ಯುಗೆ ಹೋಗಿ ಸಂಸತ್ ದಾಳಿ ಹಿಂದಿನ ರೂವರಿ ಅಫ್ಜಲ್ ಗುರು ಪರ ಘೋಷಣೆ ಕೂಗಿದವರನ್ನು ಬೆಂಬಲಿಸಿದರು ಎಂದು ಟೀಕಿಸಿದರು.
ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಬಗ್ಗೆ ರಾಹುಲ್ ನೀಡಿದ ಹೇಳಿಕೆಯು ಖಂಡಿನೀಯ. ಕಾಂಗ್ರೆಸ್ನಿಂದ ದೇಶ ಒಡೆಯಲು ಮಾತ್ರ ಸಾಧ್ಯ. ಒಂದುಗೂಡಿಸಲು ಸಾಧ್ಯವಿಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ಹೇಳಿದರು.
ಆಮ್ ಅದ್ಮಿ ಪಕ್ಷದ ವಿರುದ್ಧವೂ ವಾಗ್ದಾಳಿ ನಡೆಸಿರುವ ನಡ್ಡಾ, ಅರವಿಂದ ಕೇಜ್ರಿವಾಲ್ ಅವರ ಪಕ್ಷದ ಅಭ್ಯರ್ಥಿಗಳು ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಠೇವಣಿ ಮೊತ್ತವನ್ನು ಕಳೆದುಕೊಳ್ಳಲಿದ್ದಾರೆ ಎಂದು ಕುಟುಕಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.