ADVERTISEMENT

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆ ಮರುಜಾರಿ: ಪ್ರಿಯಾಂಕಾ ಗಾಂಧಿ

ಹಿಮಾಚಲ ಪ್ರದೇಶ: ಪರಿವರ್ತನಾ ಪ್ರತಿಜ್ಞಾ ರ‍್ಯಾಲಿಯಲ್ಲಿ ಪ್ರಿಯಾಂಕಾ ಗಾಂಧಿ ಭರವಸೆ

ಪಿಟಿಐ
Published 14 ಅಕ್ಟೋಬರ್ 2022, 11:14 IST
Last Updated 14 ಅಕ್ಟೋಬರ್ 2022, 11:14 IST
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ   

ಶಿಮ್ಲಾ: ‘ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲಾಗುವುದು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಭರವಸೆ ನೀಡಿದ್ದಾರೆ.

ಹಿಮಾಚಲ ಪ್ರದೇಶದ ಸೋಲನ್‌ನ ಥೋಡೊ ಮೈದಾನ್‌ನಲ್ಲಿ ಶುಕ್ರವಾರ ನಡೆದ ಪಕ್ಷದ ಚುನಾವಣಾ ‘ಪರಿವರ್ತನಾ ಪ್ರತಿಜ್ಞಾ’ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸಲಾಗುವುದು ಹಾಗೂ ನಿರುದ್ಯೋಗಿ ಯುವಜನರಿಗೆ ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದರು.

ಇದಕ್ಕೂ ಮುನ್ನ ಪ್ರಿಯಾಂಕಾ ಅವರು, ಸೋಲನ್‌ನಲ್ಲಿರುವ ಮಾ ಶೂಲಿನಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ಅವರು ಪಕ್ಷದ ಚುನಾವಣಾ ರ‍್ಯಾಲಿಯಲ್ಲಿ ಪಕ್ಷದ ಸಿದ್ಧಾಂತ ಪ್ರತಿಪಾದಿಸುವ ಗೀತೆಯನ್ನೂ ಅವರು ಬಿಡುಗಡೆ ಮಾಡಿದರು.

ADVERTISEMENT

ಊನಾ ಮತ್ತು ಚಂಬಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ರ‍್ಯಾಲಿಗಳನ್ನು ನಡೆಸಿದ ಒಂದು ದಿನದ ಬಳಿಕ ಪ್ರಿಯಾಂಕಾ ಪಕ್ಷದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ರ‍್ಯಾಲಿ ಸಂದರ್ಭದಲ್ಲಿ ಮೋದಿ ಅವರು, ಊನಾದಲ್ಲಿ ಭಾರತದ 4ನೇವಂದೇ ಭಾರತ್‌ ಏಕ್ಸ್‌ಪ್ರೆಸ್‌ಗೆ ಚಾಲನೆ ನೀಡುವುದರ ಜತೆಗೆ,ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಿದ್ದಾರೆ.

ಕಾಂಗ್ರೆಸ್ ರ‍್ಯಾಲಿಯಲ್ಲಿ ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಹಿಮಾಚಲ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್,ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಕೇಶ್ ಅಗ್ನಿಹೋತ್ರಿ, ಪಕ್ಷದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸುಖವಿಂದರ್ ಸುಖು ಮತ್ತು ಹಿರಿಯ ನಾಯಕ ರಾಜೀವ್ ಶುಕ್ಲಾ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.