ಲಖನೌ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಪಶ್ಚಿಮ ಉತ್ತರಪ್ರದೇಶದ ಸಹರಾನ್ಪುರದಲ್ಲಿ ಕಿಸಾನ್ ಪಂಚಾಯತ್ ಆಯೋಜಿಸಿದ್ದ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಅವಮಾನಿಸುತ್ತಿದ್ದಾರೆ ಎಂದು ಆರೋಪಿಸಿದರು.
‘ಹೊಸದಾಗಿ ತಂದಿರುವ ಈ ಮೂರು ಕೃಷಿ ಕಾಯ್ದೆಗಳು ರಾಕ್ಷಸರೂಪಿಯಾಗಿದ್ದು, ರೈತ ವಿರೋಧಿಯಾಗಿವೆ. ಈ ಕಾಯ್ದೆಗಳನ್ನು ರದ್ದುಪಡಿಸುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ. ನೀವು ಕಾಂಗ್ರೆಸ್ಗೆ ಮತ ನೀಡಿ, ಅಧಿಕಾರ ನೀಡಿದರೆ ಈ ಕಾಯ್ದೆಗಳನ್ನು ನಾವು ಖಂಡಿತಾ ರದ್ದುಪಡಿಸುತ್ತೇವೆ’ ಎಂದು ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ರೈತರನ್ನು ಉದ್ದೇಶಿಸಿ ಹೇಳಿದ್ದಾರೆ.
ರಾಜ್ಯದಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಗೂ ವರ್ಷ ಮುಂಚಿತವಾಗಿ ಪಕ್ಷವು ಆಯೋಜಿಸುತ್ತಿರುವ ಇಂತಹ ಸರಣಿ ರೈತರ ರ್ಯಾಲಿಗಳಲ್ಲಿ ಪಶ್ಚಿಮ ಉತ್ತರಪ್ರದೇಶದಲ್ಲಿ ನಡೆದ ರ್ಯಾಲಿ ಮೊದಲನೆಯದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.