ಮಲ್ಲಿಕಾರ್ಜುನ ಖರ್ಗೆ
– ಪಿಟಿಐ ಚಿತ್ರ
ಪಟ್ನಾ: ಸ್ವಾತಂತ್ರ್ಯಾನಂತರ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಬಿಹಾರದ ರಾಜಧಾನಿ ಪಟ್ನಾದಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸುತ್ತಿದೆ. ಬಿಹಾರ ವಿಧಾನಸಭೆ ಚುನಾವಣೆ ಮತ್ತು ಬಿಜೆಪಿ ವಿರುದ್ಧ ಮತ ಕಳ್ಳತನ ಕುರಿತಾದ ತನ್ನ ಹೋರಾಟವನ್ನು ತೀವ್ರಗೊಳಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇದು ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಾಗಿದ್ದು, ವಿಶೇಷ ಆಹ್ವಾನಿತರು, ಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್ಪಿ) ನಾಯಕರು ಭಾಗವಹಿಸಲಿದ್ದಾರೆ.
ಮುಂಬರುವ ಬಿಹಾರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಣಾಯಕ ಸಭೆಯಲ್ಲಿ ಒಂದೆರಡು ನಿರ್ಣಯಗಳನ್ನು ಅಂಗೀಕರಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ಸಿಡಬ್ಲ್ಯೂಸಿ ಸಭೆ ಬೆಳಿಗ್ಗೆ 10:30ರ ಸುಮಾರಿಗೆ ಇಲ್ಲಿನ ಸದಾಕತ್ ಆಶ್ರಮದಲ್ಲಿ ಪ್ರಾರಂಭವಾಗಿದೆ. ಸ್ವಾತಂತ್ರ್ಯಾನಂತರದಲ್ಲಿ ಕಾಂಗ್ರೆಸ್ ಬಿಹಾರದಲ್ಲಿ ತನ್ನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಮಿತಿ ಸಭೆಯನ್ನು ನಡೆಸುತ್ತಿರುವುದು ಇದೇ ಮೊದಲು ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
ಸಭೆಗೂ ಮೊದಲು ಬಿಹಾರದ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಧ್ವಜಾರೋಹಣ ಮಾಡಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಖಜಾಂಚಿ ಅಜಯ್ ಮಾಕೇನ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತು ಸಚಿನ್ ಪೈಲಟ್, ಬಿಹಾರ ಕಾಂಗ್ರೆಸ್ ಮುಖ್ಯಸ್ಥ ರಾಜೇಶ್ ಕುಮಾರ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಭೆ ಮೂಲಕ ಬಿಜೆಪಿಯ ಮತಕಳ್ಳತನ ಮತ್ತು ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರುದ್ಧ ಪ್ರಬಲ ಸಂದೇಶ ಕಳುಹಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದೆ.
ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಮತದಾರರ ಅಧಿಕಾರ ಯಾತ್ರೆ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.