
ಚಂಡೀಗಢ: ಕಾಂಗ್ರೆಸ್ ಹಿರಿಯ ನಾಯಕ ರಾಜ್ ಬಬ್ಬರ್ ಅವರು ಗುರುಗ್ರಾಮ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಪಕ್ಷ ಮಂಗಳವಾರ ಘೋಷಿಸಿದೆ. ಅವರು ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ರಾವ್ ಇಂದರ್ಜಿತ್ ಸಿಂಗ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಇದರೊಂದಿಗೆ ಹರಿಯಾಣದಲ್ಲಿ ತಾನು ಸ್ಪರ್ಧಿಸುತ್ತಿರುವ ಎಲ್ಲ 9 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ. ರಾಜ್ಯದ 10 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವನ್ನು ಅದು ಮಿತ್ರಪಕ್ಷವಾದ ಎಎಪಿಗೆ ಬಿಟ್ಟುಕೊಟ್ಟಿದೆ.
ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶದ ಕಾಂಗ್ರಾ ಕ್ಷೇತ್ರದಿಂದ, ಮಾಜಿ ಶಾಸಕ ಸತ್ಪಾಲ್ ರಾಯ್ಜಾದಾ ಅವರು ಹಮೀರ್ಪುರ್ ಲೋಕಸಭಾ ಕ್ಷೇತ್ರದಿಂದ, ಭೂಷಣ್ ಪಾಟೀಲ್ ಮುಂಬೈ ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷ ಪ್ರಕಟಿಸಿದೆ. ಸತ್ಪಾಲ್ ಅವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಎದುರಿಸಲಿದ್ದಾರೆ.
ಆದರೆ, ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಮೂರು ದಿನ ಬಾಕಿ ಇರುವ ಅಮೇಠಿ ಮತ್ತು ರಾಯ್ಬರೇಲಿ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಯಾರು ಎನ್ನುವುದು ಗುಟ್ಟಾಗಿದ್ದು, ಕುತೂಹಲ ತೀವ್ರಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.