ಕೋಲ್ಕತ್ತ: ರಾಹುಲ್ ಗಾಂಧಿ ಅವರ ಬಗ್ಗೆ ಅವಮಾನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಪಶ್ಚಿಮ ಬಂಗಾಳ ಕಾಂಗ್ರೆಸ್ ದೂರು ದಾಖಲಿಸಿದೆ.
ಕಾಂಗ್ರೆಸ್ನ ‘ಭಾರತ ಜೋಡೊ ನ್ಯಾಯ ಯಾತ್ರೆ’ಯ ಬಗ್ಗೆ ಮಾತನಾಡುವ ವೇಳೆ ರಾಹುಲ್ ಗಾಂಧಿ ಅವರ ಬಗ್ಗೆ ಸುವೇಂದು ಅಧಿಕಾರಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಈ ವಿಡಿಯೊದ ಅಧಿಕೃತತೆ ಬಗ್ಗೆ ಖಚಿತತೆ ಇಲ್ಲ.
‘ನಮ್ಮ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಮಾನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಸುವೇಂದು ಅಧಿಕಾರಿ ವಿರುದ್ಧ ನಾವು ದೂರು ದಾಖಲಿಸಿದ್ದೇವೆ. ಅವರ ಈ ನಡವಳಿಕೆ ಮಾನಹಾನಿಯಿಂದ ಕೂಡಿದ್ದು, ಅದನ್ನು ಸಹಿಸಿಕೊಳ್ಳಲು ಆಗುವುದಿಲ್ಲ. ತಕ್ಷಣವೇ ಕ್ರಮ ಜರುಗಿಸಬೇಕು ಎಂದು ನಾವು ಪೊಲೀಸರಲ್ಲಿ ವಿನಂತಿ ಮಾಡಿಕೊಂಡಿದ್ದೇವೆ’ ಎಂದು ರಾಜ್ಯ ಕಾಂಗ್ರೆಸ್ ನಾಯಕ ಸುವಂಕರ್ ಸರ್ಕಾರ್ ತಿಳಿಸಿದ್ದಾರೆ.
ಉತ್ತರ ಬಂಗಾಳದ ಸಿಲಿಗುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸುವೇಂದು ಅವರು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ಬಯಸಿ ಸುವೇಂದು ಅವರನ್ನು ಸಂಪರ್ಕಿಸಲಾಯಿತಾದರೂ, ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.
ಟಿ.ಎಂ.ಸಿ.ಯ ಹಲವು ನಾಯಕರು ಕೂಡ ಸುವೇಂದು ಅಧಿಕಾರಿ ಅವರ ವಿಡಿಯೊವನ್ನು ಹಂಚಿಕೊಂಡಿದ್ದು, ರಾಜಕೀಯಕ್ಕಾಗಿ ಈ ರೀತಿ ಅಸಭ್ಯ ಪದ ಬಳಕೆ ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.