ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದ ಮೂಲಭೂತ ಹಕ್ಕುಗಳ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದ್ದು, ಸಮಾಜವನ್ನು ದ್ವೇಷದಿಂದ ವಿಭಜಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ನ 138ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಬೆಲೆ ಏರಿಕೆ ಮತ್ತು ನಿರುದ್ಯೋಗದಿಂದ ಜನರು ತತ್ತರಿಸಿದ್ದಾರೆ. ಆದರೆ ಸರ್ಕಾರವು ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದರು.
ಆದರೆ ಎಲ್ಲರನ್ನು ಒಳಗೊಳ್ಳುವ ಕಾಂಗ್ರೆಸ್ ನೀತಿಯಿಂದಾಗಿ ದೇಶವು ಪ್ರಗತಿಯನ್ನು ಸಾಧಿಸಿದೆ ಎಂದು ಅವರು ಹೇಳಿದರು.
ಭಾರತವು ಯಶಸ್ವಿ ಮತ್ತು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿದೆ. ಕೆಲವೇ ದಶಕಗಳಲ್ಲಿ ಆರ್ಥಿಕ, ಪರಮಾಣು ಮತ್ತು ಕಾರ್ಯತಂತ್ರದ ಕ್ಷೇತ್ರಗಳಲ್ಲಿ ಸೂಪರ್ ಪವರ್ ಆಗಿ ಹೊರಹೊಮ್ಮಿದೆ. ಕೃಷಿ, ಶಿಕ್ಷಣ, ವೈದ್ಯಕೀಯ, ಐಟಿ ಮತ್ತು ಸೇವಾ ವಲಯಗಳಲ್ಲಿ ಅಗ್ರಮಾನ್ಯ ದೇಶಗಳಲ್ಲಿ ಒಂದಾಗಿದೆ ಎಂದು ಅವರು ಉಲ್ಲೇಖಿಸಿದರು.
ಇವೆಲ್ಲವೂ ತಾನಾಗಿಯೇ ಆಗಲಿಲ್ಲ. ಪ್ರಜಾಪ್ರಭುತ್ವದಲ್ಲಿ ಕಾಂಗ್ರೆಸ್ಗೆ ಇರುವ ನಂಬಿಕೆ, ಎಲ್ಲರನ್ನೂ ಒಳಗೊಂಡ ಪಕ್ಷದ ಅಂತರ್ಗತ ಸಿದ್ಧಾಂತ ಮತ್ತು ಎಲ್ಲರಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ನೀಡುವ ಸಂವಿಧಾನದ ಮೇಲಿನ ಸಂಪೂರ್ಣ ವಿಶ್ವಾಸದಿಂದ ನಿಜವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.