ನವದೆಹಲಿ: ಕೋವಿಡ್–19 ಪಿಡುಗಿನ ಈ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಏರಿಕೆಯಾಗುತ್ತಿದ್ದು, ಇದರ ಪರಿಹಾರಕ್ಕಾಗಿ ಸರ್ಕಾರ ಸೂಕ್ತ ನೀತಿ ರೂಪಿಸಬೇಕು ಎಂದು ಕಾಂಗ್ರೆಸ್ ರಾಜ್ಯಸಭೆಯಲ್ಲಿ ಆಗ್ರಹಿಸಿದೆ.
ನಿರುದ್ಯೋಗ ಸಮಸ್ಯೆಯಿಂದ ಸಂಘಟಿತ ಹಾಗೂ ಅಸಂಘಟಿತ ವಲಯಗಳ ಕಾರ್ಮಿಕರಲ್ಲಿ ಮಾನಸಿಕ ಒತ್ತಡ ಹೆಚ್ಚುತ್ತಿದೆ. ಈ ಕಾರಣದಿಂದ, ಕೆಲಸ ಕಳೆದುಕೊಂಡವರಿಗೆ ಸರ್ಕಾರ ಪ್ರತಿ ತಿಂಗಳು ₹ 15 ಸಾವಿರ ಸಹಾಯಧನ ನೀಡಬೇಕು ಎಂದು ಸಮಾಜವಾದಿ ಪಕ್ಷವೂ ಕಾಂಗ್ರೆಸ್ ಬೇಡಿಕೆಗೆ ದನಿಗೂಡಿಸಿತು.
ಶೂನ್ಯವೇಳೆಯಲ್ಲಿ ಈ ವಿಷಯದ ಕುರಿತು ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ‘ಪ್ರತಿ ಏಳು ಭಾರತೀಯರಲ್ಲಿ ಒಬ್ಬರು ಖಿನ್ನತೆಯಿಂದ ಬಳಲುತ್ತಿದ್ದಾರೆ. ಪಿಡುಗಿನ ಈ ಅವಧಿಯಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಂಖ್ಯೆ ಏರಿಕೆಯಾಗಿದ್ದು, ಪ್ರಮುಖವಾಗಿ ವಿದ್ಯಾರ್ಥಿಗಳು ಹಾಗೂ ಮಕ್ಕಳು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಶಿಕ್ಷಣಕ್ಕೆ ಆನ್ಲೈನ್ ಸಂಪರ್ಕದ ಕೊರತೆ, ಮಧ್ಯಾಹ್ನದ ಬಿಸಿಯೂಟ ಲಭ್ಯವಿರದೇ ಇರುವುದು, ಕೊರೊನಾ ಸೋಂಕಿಗೆ ಒಳಗಾಗುವ ಭಯವೇ ಇದಕ್ಕೆ ಕಾರಣವಾಗುತ್ತಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.