ಮಾಯಾವತಿ
ಲಖನೌ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿರುವ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ, ದೇಶಕ್ಕಾಗಿ ಅಂಬೇಡ್ಕರ್ ಅವರು ನಡೆಸಿದ ಹೋರಾಟವನ್ನು ನಿರ್ಲಕ್ಷಿಸಿದ್ದ ಕಾಂಗ್ರೆಸ್ ಪಕ್ಷ ಸ್ವಾರ್ಥ ಮತ್ತು ವಂಚನೆಯ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ ಮಾಯಾವತಿ, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ಬಳಸಿಕೊಳ್ಳುವಲ್ಲಿ ಆಡಳಿತ ಪಕ್ಷ ಮತ್ತು ಕಾಂಗ್ರೆಸ್ ಒಂದೇ ರೀತಿಯ ಧೋರಣೆಯನ್ನು ಹೊಂದಿವೆ ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಬಿಎಸ್ಪಿ ಸರ್ಕಾರವಿದ್ದಾಗ ಬಾಬಾ ಸಾಹೇಬ್ ಸೇರಿದಂತೆ ಬಹುಜನ ಸಮಾಜದಲ್ಲಿ ಜನಿಸಿದ ಸಂತರು, ಗುರುಗಳು ಮತ್ತು ಮಹಾನ್ ವ್ಯಕ್ತಿಗಳಿಗೆ ಸಂಪೂರ್ಣ ಗೌರವ ಮತ್ತು ಮನ್ನಣೆ ಸಿಕ್ಕಿತ್ತು. ಇದನ್ನು ಈ ಜಾತಿವಾದಿ ಪಕ್ಷಗಳಿಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಮಾಯಾವತಿ ತಿಳಿಸಿದ್ದಾರೆ.
ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಅವಮಾನಿಸಿರುವುದಕ್ಕೆ ದೇಶದಾದ್ಯಂತ ಜನರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಕ್ಕಾಗಿ ಅಂಬೇಡ್ಕರ್ ಅವರು ನಡೆಸಿದ ಹೋರಾಟವನ್ನು ನಿರ್ಲಕ್ಷಿಸಿರುವ ಮತ್ತು ನೋವುಂಟು ಮಾಡಿರುವ ಕಾಂಗ್ರೆಸ್, ಸ್ವಾರ್ಥ ಹಾಗೂ ವಂಚನೆ ರಾಜಕಾರಣದಲ್ಲಿ ತೊಡಗಿದೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.