
ಜೈರಾಮ್ ರಮೇಶ್
(ಚಿತ್ರ ಕೃಪೆ–ಪಿಟಿಐ)
ನವದೆಹಲಿ: ಲೋಕಸಭೆ ಚುನಾವಣೆಗೆ ತಿಂಗಳು ಬಾಕಿ ಇರುವಾಗ ಸಿಎಎ ಜಾರಿ ಮಾಡುವ ಮೂಲಕ ಬಿಜೆಪಿ ರಾಜಕೀಯ ಧ್ರುವೀಕರಣಕ್ಕೆ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟೀಕಿಸಿದ್ದಾರೆ.
ನಾವು ಯುವಕರು, ರೈತರು, ಮಹಿಳೆಯರು ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಮೋದಿ ಅವರ ಬಳಿ ಯಾವ ವಿಷಯವಿದೆ? ಬಿಜೆಪಿ ಬಳಿ ಯಾವ ವಿಷಯವಿದೆ? ಮೋದಿ 10 ವರ್ಷಗಳಲ್ಲಿ ದೇಶಕ್ಕೆ ಆದ ಅನ್ಯಾಯದ ಬಗ್ಗೆ ಮಾತನಾಡಿಲ್ಲ. ಸಿಎಎ ಜಾರಿ ಮಾಡಲು 4 ವರ್ಷ 3 ತಿಂಗಳು ಬೇಕಾಯಿತೇ? ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗ ಜನರಿಗೆ ಧ್ರುವೀಕರಣದ ಡೋಸ್ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಸಿಎಎ ಜಾರಿ ಮಾಡುವುದಿಲ್ಲ ಎಂದು ಹೇಳಿವೆ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸಂವಿಧಾನಕ್ಕೆ ವಿರುದ್ಧ. ಹಾಗಾಗಿ, ನಾವು ಸಹ ಸಿಎಎ ಅನ್ನು ವಿರೋಧಿಸುತ್ತೇವೆ ಎಂದು ರಮೇಶ್ ಹೇಳಿದರು. ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲೂ ದಾವೆ ಹೂಡಲಾಗಿದೆ ಎಂದು ಹೇಳಿದ್ದಾರೆ.
ಭಾರತದ ನೆರೆಹೊರೆಯ, ಮುಸ್ಲಿಂ ಬಾಹುಳ್ಯದ ದೇಶಗಳಾದ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ದೌರ್ಜನ್ಯಕ್ಕೆ ಗುರಿಯಾಗಿ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತವನ್ನು ಪ್ರವೇಶಿಸಿದ ಹಿಂದೂ, ಪಾರ್ಸಿ, ಸಿಖ್, ಜೈನ, ಬೌದ್ಧ, ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವ ನೀಡುವ ಉದ್ದೇಶವನ್ನು ಸಿಎಎ ಹೊಂದಿದೆ. ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆಯು ಇನ್ನು ಕೆಲವೇ ದಿನಗಳಲ್ಲಿ ಜಾರಿಗೆ ಬರುವ ನಿರೀಕ್ಷೆ ಇದೆ. ಈ ಹೊತ್ತಿನಲ್ಲಿ ಕೇಂದ್ರವು ನಿಯಮಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.