ಮುಂಬೈ: ಮಹಾರಾಷ್ಟ್ರದ ಹಿರಿಯ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಮಂಗಳವಾರ ಪಕ್ಷ ತೊರೆದಿದ್ದಾರೆ. ಇವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಕೇಳಿಬಂದಿದ್ದು ಕಾಂಗ್ರೆಸ್ನ 10 ಶಾಸಕರು ಪಕ್ಷ ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.ಆದಾಗ್ಯೂ, ಶಾಸಕರು ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿಯನ್ನು ಕಾಂಗ್ರೆಸ್ ತಳ್ಳಿ ಹಾಕಿದೆ.
ಒಂದು ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಈ ರೀತಿಯ ಬೆಳವಣಿಗೆಗಳಾದರೆ ನವೆಂಬರ್ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಲಿದೆ.
ಕಳೆದ ತಿಂಗಳು ಪಾಟೀಲ್ ಅವರ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಾಟೀಲ್ ಅವರ ಪುತ್ರ ಸುಜೋಯ್ ವಿಖೆ ಪಾಟೀಲ್ ಲೋಕಸಭಾ ಚುನಾವಣೆಯಲ್ಲಿ ಅಹ್ಮದಾನಗರ್ ಚುನಾವಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.ವಿಖೆ ಅವರು ವಿಧಾನಸಭಸ್ಪೀಕರ್ ಹರಿಬಾವು ಬಿಗಡೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಅವರ ಕಚೇರಿಯ ಅಧಿಕಾರಿಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
ಅದೇ ವೇಳೆ ಮೂರು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ, ಮಾಜಿರಾಜ್ಯ ಖಾತೆ ಸಚಿವಅಬ್ದುಲ್ ಸತ್ತಾರ್ ಅವರು ಕೂಡಾ ರಾಜೀನಾಮೆ ನೀಡಿದ್ದಾರೆ.ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಚೌಹಾಣ್ ಅವರ ಆಪ್ತರಾಗಿದ್ದ ಸತ್ತಾರ್, ಬಿಜೆಪಿ ಸೇರುವುದಾಗಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.