ADVERTISEMENT

ಅಸ್ಸಾಂನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಎಫ್‌ಐಆರ್‌

ಸುದ್ದಿ ರೂಪದಲ್ಲಿ ಜಾಹೀರಾತು ನೀಡಿದ ಆರೋಪ

ಪಿಟಿಐ
Published 29 ಮಾರ್ಚ್ 2021, 8:11 IST
Last Updated 29 ಮಾರ್ಚ್ 2021, 8:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಗುವಾಹಟಿ: ‘ಜಾಹೀರಾತನ್ನು ಮರೆಮಾಚಿ ಸುದ್ದಿ ರೂಪದಲ್ಲಿ ನೀಡಿದ್ದಾರೆ’ ಎಂದು ಆರೋಪಿಸಿ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಅಸ್ಸಾಂ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಹಾಗೂ ಎಂಟು ಪತ್ರಿಕೆಗಳ ವಿರುದ್ಧ ಕಾಂಗ್ರೆಸ್‌ ಪಕ್ಷ ಭಾನುವಾರ ರಾತ್ರಿ ಡಿಸ್ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದೆ.

‘ಮೊದಲ ಹಂತದಲ್ಲಿ ಚುನಾವಣೆ ನಡೆದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ‘ ಎಂಬ ಮಾಹಿತಿಯನ್ನು ಸುದ್ದಿರೂಪದಲ್ಲಿ ಪ್ರಕಟಿಸುವ ಮೂಲಕ ಬಿಜೆಪಿ ಮಾದರಿ ನೀತಿ ಸಂಹಿತೆ (ಎಂಸಿಸಿ), ಪ್ರಜಾ ಪ್ರಾತಿನಿಧ್ಯ ಕಾಯ್ದೆ, 1951 ರ ಸೆಕ್ಷನ್ 126 ಎ ಮತ್ತು ಮಾರ್ಚ್ 26 ರಂದು ಹೊರಡಿಸಿದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಉಲ್ಲಂಘಿಸಿದೆ. ಹೀಗಾಗಿ ಈ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ಎಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ ನಿರನ್ ಬೋರಾ ಹೇಳಿದರು.

‘ಇದು ಎಂಸಿಸಿ, ಪ್ರಜಾನಿಧಿ ಕಾಯ್ದೆ ಉಲ್ಲಂಘನೆಯಾಗಿದೆ. ಬಿಜೆಪಿಯವರು ತಾವು ಸೋಲುತ್ತೇವೆಂದು ಅರಿತುಕೊಂಡ ನಂತರ ಮತದಾರರ ಮೇಲೆ ಪ್ರಭಾವ ಬೀರಲು ಇಂಥ ಅಕ್ರಮ ಮತ್ತು ಅಸಾಂವಿಧಾನಿಕವಿಧಾನಗಳನ್ನು ಅನುಸರಿಸು ತ್ತಿದ್ದಾರೆ‘ ಎಂದು ಬೋರಾ ದೂರಿದ್ದಾರೆ.

ADVERTISEMENT

‘ಎರಡು ಮತ್ತು ಮೂರನೇ ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರನ್ನು ವಂಚಿಸಲು ಮುಖ್ಯಮಂತ್ರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯ ಮುಖಂಡರು ಮತ್ತು ಪಕ್ಷದ ಇತರ ಸದಸ್ಯರು ಉದ್ದೇಶಪೂರ್ವಕವಾಗಿ ಇಂಥ ಪೂರ್ವ ಯೋಜಿತ ಪಿತೂರಿಯಲ್ಲಿ ತೊಡಗಿದ್ದಾರೆ‘ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.