ನವದೆಹಲಿ:ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಅವರ ರಾಜೀನಾಮೆ ಪ್ರಸ್ತಾಪವನ್ನು ನಾವು ತಿರಸ್ಕರಿಸಿದ್ದೇವೆ ಎಂದು ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲ ಸ್ಪಷ್ಟಪಡಿಸಿದರು.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲು ಇಲ್ಲಿ ಶನಿವಾರ ನಡೆದ ಸಿಡಬ್ಲ್ಯುಸಿ ಸಭೆಯ ಬಳಿಕ ಸುರ್ಜೆವಾಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಹುಲ್ ಗಾಂಧಿ ನಮ್ಮ ನಾಯಕರಾಗಿಯೇ ಇರಲಿದ್ದಾರೆ ಎಂದು ಹೇಳಿದರು.
‘ಪಕ್ಷದ ಅಧ್ಯಕ್ಷ ಸ್ಥಾನ ನೆಹರೂ ಕುಟುಂಬದ ಹೊರತಾಗಿರಬೇಕು. ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ಅವರ ಹೆಸರೂ ಪ್ರಸ್ತಾಪ ಬೇಡ’ ಎಂದು ಸಭೆಯಲ್ಲಿ ಅಧ್ಯಕ್ಷ ರಾಹುಲ್ ಗಾಂಧಿ ಇಂಗಿತ ವ್ಯಕ್ತಪಡಿದರು. ಆದರೆ, ಅವರ ಅಭಿಪ್ರಾಯವನ್ನು ಸಭೆಯಲ್ಲಿದ್ದ ನಾಯಕರು ಸರ್ವಾನುಮತದಿಂದ ತಿರಸ್ಕರಿಸಿದ್ದೇವೆ ಎಂದು ಹೇಳಿದರು.
ಪಕ್ಷಕ್ಕೆ ರಾಹುಲ್ ಗಾಂಧಿ ಅವರ ಅನಿವಾರ್ಯತೆ ಮತ್ತು ಮಾರ್ಗದರ್ಶನದ ಅಗತ್ಯ ಇದೆ. ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಪಕ್ಷ ಸಂಘಟನೆಗೆ ರಾಹುಲ್ಗೆ ಹೆಚ್ಚಿನ ಅಧಿಕಾರ ನೀಡಲು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ಮುಖಂಡರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.