ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ವಿಚಾರದಲ್ಲಿ ರಾಹುಲ್ ಗಾಂಧಿ ಅವರ ಮನವೊಲಿಸಲು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಪ್ರಯತ್ನಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ಸೋಮವಾರ ಹೇಳಿವೆ.
ತಾವು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಬದಲು ರಾಹುಲ್ ಮನವೊಲಿಸಲು ಗೆಹಲೋತ್ ಯತ್ನಿಸುತ್ತಿದ್ದಾರೆ. ಜತೆಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ನಿಷ್ಠರಾಗಿರುವುದೂ ನಿಜ ಎಂದು ಮೂಲಗಳನ್ನು ಉಲ್ಲೇಖಸಿ ‘ಎಎನ್ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕಾಂಗ್ರೆಸ್ನ ಅಧ್ಯಕ್ಷ ಸ್ಥಾನಕ್ಕೆ ಮುಂದಿನ ತಿಂಗಳು ನಡೆಯಲಿರುವ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿಯವರಿಂದ ಸಂಸದ ಶಶಿ ತರೂರ್ ಅನುಮತಿ ಪಡೆದಿದ್ದಾರೆ ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ, ಅಶೋಕ್ ಗೆಹಲೋತ್ ಸಹ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನೆಲೆಯಲ್ಲಿ ಗೆಹಲೋತ್ ಆಪ್ತ ಮೂಲಗಳು ಸ್ಪಷ್ಟನೆ ನೀಡಿವೆ.
‘ಶಶಿ ತರೂರ್ ಬಯಸುವುದಾದರೆ ಅಧ್ಯಕ್ಷ ಸ್ಥಾನಕ್ಕೆ ಅವರು ಸ್ಪರ್ಧಿಸಬಹುದು. ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಲು ಅವಕಾಶವಿದೆ’ ಎಂದು ಸೋನಿಯಾ ಗಾಂಧಿ ಹೇಳಿರುವುದಾಗಿ ವರದಿಯಾಗಿದೆ. ಇದಕ್ಕೂ ಮುನ್ನ,ತರೂರ್ ಅವರು ಸೋನಿಯಾ ಗಾಂಧಿ ಅವರನ್ನು ಸೋಮವಾರ ಮಧ್ಯಾಹ್ನ ಭೇಟಿಯಾಗಿ ಮಾತುಕತೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.